ADVERTISEMENT

22ರಂದು ಮಿಷನ್ ಅಡ್ಮಿಷನ್

​ಪ್ರಜಾವಾಣಿ ವಾರ್ತೆ
Published 20 ಜನವರಿ 2011, 19:45 IST
Last Updated 20 ಜನವರಿ 2011, 19:45 IST

ಬೆಂಗಳೂರು: ಅಖಿಲ ಭಾರತೀಯ ಪ್ರವೇಶ ಪರೀಕ್ಷೆಗಳ ಕೌನ್ಸೆಲಿಂಗ್‌ಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಕಾನೂನು ಪದವಿ ಪ್ರವೇಶಾಕಾಂಕ್ಷಿಗಳಾದ ಪಿಯುಸಿ ಅಥವಾ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ  ‘ಡೆಕ್ಕನ್ ಹೆರಾಲ್ಡ್, ಪ್ರಜಾವಾಣಿ’ ಅರ್ಪಿಸುವ ‘ಮಿಷನ್ ಅಡ್ಮಿಷನ್ 2011’ ಕಾರ್ಯಕ್ರಮ ಇದೇ 22ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ.

ನಗರದ ಕೆ.ಜಿ.ರಸ್ತೆಯ ಶಿಕ್ಷಕರ ಸದನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಪ್ರಭುದೇವ್, ರಾಷ್ಟ್ರೀಯ ಕಾನೂನು ಶಾಲೆಯ ಕುಲಪತಿ ಪ್ರೊ.ಆರ್.ವೆಂಕಟರಾವ್, ಐಐಐಟಿ ಮುಖ್ಯಸ್ಥ ಪ್ರೊ. ಸಡಗೊಪನ್, ಏಸ್ ಕ್ರಿಯೇಟಿವ್ ಲರ್ನಿಂಗ್ ಪ್ರೈ.ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ಶ್ರೀಧರ್, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕ ಡಾ. ಎಸ್.ಸಚ್ಚಿದಾನಂದ ಹಾಗೂ ಪ್ಯಾರಾಡೈಮ್, ಎ ಅಂಡ್ ಆರ್ ಸಂಸ್ಥೆ ನಿರ್ದೇಶಕಿ ಅನಿತಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ.

ಕಾರ್ಯಕ್ರಮ ಕುರಿತು ಮಾತನಾಡಿದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕ ಡಾ. ಎಸ್.ಸಚ್ಚಿದಾನಂದ ಅವರು ‘ಈ ಕಾರ್ಯಕ್ರಮದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ವೈದ್ಯಕೀಯ ಕ್ಷೇತ್ರದಲ್ಲಿರುವ ಅವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಾನು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ’ ಎಂದರು.

ಪ್ಯಾರಾಡೈಮ್, ಎ ಅಂಡ್ ಆರ್ ಸಂಸ್ಥೆ ನಿರ್ದೇಶಕಿ ಅನಿತಾ ಮಾತನಾಡಿ ‘ಪಿಯುಸಿ ನಂತರ ಕೇವಲ ಎಂಜಿನಿಯರಿಂಗ್ ಅಥವಾ ವೈದ್ಯಕೀಯ ಕ್ಷೇತ್ರವೇ ಅತ್ಯುತ್ತಮ ಆಯ್ಕೆಯಲ್ಲ. ದೇಶದಲ್ಲಿ ಕಾನೂನು ಶಿಕ್ಷಣ ನೀಡುವ ರಾಷ್ಟ್ರೀಯ ಕಾನೂನು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವಿದೆ. ಕಾನೂನು ಕ್ಷೇತ್ರದಲ್ಲಿ ಉದ್ಯೋಗವಕಾಶ ಕುರಿತು ಕಾರ್ಯಕ್ರಮದಲ್ಲಿ ತಿಳಿಸಲಾಗುವುದು’ಎಂದು ಹೇಳಿದರು.

ಮೊದಲು ಬಂದವರಿಗೆ ಮೊದಲ ಆದ್ಯತೆಯಾಗಿದ್ದು ಪ್ರವೇಶ ಉಚಿತವಾಗಿದೆ. ಕಾರ್ಯಕ್ರಮದಲ್ಲಿ ಉಪಹಾರ ವ್ಯವಸ್ಥೆ ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗೆ  ಸಂಪರ್ಕಿಸಿ 25880202/216//226//225. (ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.