ಬೆಂಗಳೂರು: ಎಚ್ಎಎಲ್ ಸಮೀಪದ ಕಾಡುಬೀಸನಹಳ್ಳಿಯಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಮೆರುಕ್ಯಾಬ್ಸ್ ಕಂಪೆನಿಗೆ ಸೇರಿದ 24 ಹಳೆಯ ಕಾರುಗಳು ಬೆಂಕಿಗೆ ಆಹುತಿಯಾಗಿವೆ.
ಕಂಪೆನಿಯು ಯಾರ್ಡ್ ರಸ್ತೆಯಲ್ಲಿರುವ ತೆಂಗಿನತೋಟದ ಜಾಗವನ್ನು ಬಾಡಿಗೆಗೆ ಪಡೆದಿದೆ. ಈ ಜಾಗದಲ್ಲಿ ಸುಮಾರು 400 ಕಾರುಗಳನ್ನು ನಿಲುಗಡೆ ಮಾಡಲಾಗಿತ್ತು. ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕಾರುಗಳಿಗೆ ವ್ಯಾಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಆರು ವಾಹನಗಳಲ್ಲಿ ಸ್ಥಳಕ್ಕೆ ಬಂದ 35 ಮಂದಿ ಅಗ್ನಿಶಾಮಕ ಸಿಬ್ಬಂದಿ ಒಂದೂವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ರೂ.40 ಲಕ್ಷ ನಷ್ಟವಾಗಿದೆ ಎಂದು ಕಂಪೆನಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿ ಸುಮಾರು 400 ಕಾರುಗಳು ಹಾಗೂ ಇತರೆ ವಾಹನಗಳನ್ನು ನಿಲುಗಡೆ ಮಾಡಲಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವುದು ತಡವಾಗಿದ್ದರೆ ಎಲ್ಲ ವಾಹನಗಳೂ ಬೆಂಕಿಗೆ ಆಹುತಿಯಾಗುತ್ತಿದ್ದವು ಎಂದು ಪೊಲೀಸರು ಹೇಳಿದ್ದಾರೆ.
ಯಾರೊ ಸೇದಿ ಬಿಸಾಡಿರುವ ಬೀಡಿ ಅಥವಾ ಸಿಗರೇಟ್ ತುಂಡಿನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಚ್ಎಎಲ್ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.