ಬೆಂಗಳೂರು: ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಎರಡನೇ ದಿನ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. 60 ವರ್ಷ ಮೇಲ್ಪಟ್ಟ 2,616 ಮಂದಿಗೆ ಹಾಗೂ 45 ವರ್ಷ ಮೇಲ್ಪಟ್ಟು ಅನ್ಯ ಕಾಯಿಲೆ ಹೊಂದಿರುವ 278 ಮಂದಿಗೆ ಅಭಿಯಾನದ ಎರಡನೇ ದಿನವಾದ ಮಂಗಳವಾರ ಲಸಿಕೆ ನೀಡಲಾಯಿತು.
10 ಆರೋಗ್ಯ ಕಾರ್ಯಕರ್ತರು ಲಸಿಕೆಯ ಮೊದಲ ಡೋಸ್ ಹಾಗೂ 192 ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ಪಡೆದರು. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದ 18 ಸಿಬ್ಬಂದಿ ಲಸಿಕೆಯ ಮೊದಲ ಡೋಸ್ ಪಡೆದರು. ಮಂಗಳವಾರ ಒಟ್ಟು 25 ಕೇಂದ್ರಗಳಲ್ಲಿ 4,250 ಮಂದಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿತ್ತು. ಅವರಲ್ಲಿ 3,104 ಮಂದಿ ಲಸಿಕೆ ಪಡೆದರು.
ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಅವರು ರಾಮಯ್ಯ ಸ್ಮಾರಕ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದರು.
ಬಳಿಕ ಮಾತನಾಡಿದ ಅವರು, ‘ನಾನು ಆರೋಗ್ಯಯುತವಾಗಿದ್ದೇನೆ. ಯಾವುದೇ ಆತಂಕ ಪಡೆಯದೆ ಹಿರಿಯ ನಾಗರಿಕರು ಲಸಿಕೆ ಪಡೆಯಬಹುದು’ ಎಂದು ಹೇಳಿದರು.
‘ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವ ಆರೋಗ್ಯ ಕಾರ್ಯಕರ್ತರ ಹಾಗೂ ಸರ್ಕಾರದ ಪ್ರಯತ್ನಗಳಿಗೆ ನಾವೆಲ್ಲರೂ ಬೆಂಬಲ ನೀಡಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.