ADVERTISEMENT

ಪಂಚಮಸಾಲಿ 2ಎ ಮೀಸಲಾತಿ: ಆಯೋಗಕ್ಕೆ ಪತ್ರ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 7:40 IST
Last Updated 18 ಫೆಬ್ರುವರಿ 2021, 7:40 IST

ಬೆಂಗಳೂರು: ‘ಪ್ರವರ್ಗ 2ಎ’ಗೆ ಸೇರಿಸಿ ಮೀಸಲಾತಿ ನೀಡುವಂತೆ ಪಂಚಮಸಾಲಿ ಸಮುದಾಯ ಹೋರಾಟ ನಡೆಸುತ್ತಿರುವ ಬೆನ್ನಲ್ಲೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಟಿಪ್ಪಣಿಯಂತೆ ಈ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌ ಪತ್ರ ಬರೆದಿದ್ದಾರೆ.

ಮೀಸಲಾತಿಗೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಯುತ್ತಿದ್ದು, ಇದೇ 21ರಂದು ಅರಮನೆ ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ.

‘ನಮ್ಮ ಜನಾಂಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಹಿಂದುಳಿದಿದೆ. ಸಮಾಜದ ಬಡವರಿಗೆ ತೊಂದರೆಯಾಗಿರುವುದರಿಂದ, ದುಳಿದ ವರ್ಗ 2-ಎ ಮೀಸಲಾತಿಗೆ ಸೇರಿಸಿ’ ಎಂದು ಆಗ್ರಹಿಸಿ ರಾಜ್ಯದ ಪಂಚಮಸಾಲಿ ಜನಾಂಗದ ಪ್ರಮುಖರು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

ADVERTISEMENT

‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ 1995ರಡಿಯಲ್ಲಿ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ನಡೆಸಬೇಕು. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ನಾಗರಿಕರ ವರ್ಗಗಳನ್ನು ಗುರುತಿಸಲು ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಟಿಪ್ಪಣಿಯಲ್ಲಿ ಸೂಚಿಸಿದ್ದರು.

ಮುಖ್ಯಮಂತ್ರಿಯವರ ಸೂಚನೆಯಂತೆ ಪಂಚಮಸಾಲಿ ಜನಾಂಗದ ಬಗ್ಗೆ ನಿಯಮಾನುಸಾರ ಸಮಗ್ರವಾಗಿ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಪತ್ರದಲ್ಲಿ ರಶ್ಮಿ ಮಹೇಶ್‌ ಕೋರಿದ್ದಾರೆ ಎಂದು ಸರ್ಕಾರದ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.