ಬೆಂಗಳೂರು: ‘ರಾಜ್ಯದಲ್ಲಿ ಮುಸ್ಲಿಮ್ ಸಮುದಾಯಕ್ಕೆ ನೀಡಿದ್ದ 2ಬಿ ಮೀಸಲಾತಿಯನ್ನು ಮರುಸ್ಥಾಪಿಸಿ, ಮೀಸಲಾತಿ ಪ್ರಮಾಣವನ್ನು ಶೇ 8ರಷ್ಟು ಹೆಚ್ಚಿಬೇಕು‘ ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ‘ಸಿದ್ದರಾಮಯ್ಯ ಅಹಿಂದ ವರ್ಗದ ಪರವೆಂದಾದರೆ ಕಾಂತರಾಜ್ ಆಯೋಗದ ವರದಿ ಬಹಿರಂಗಗೊಳಿಸಿ’, ‘ಮುಸ್ಲಿಮ್ ಸಮುದಾಯದವರಿಗೆ 2ಬಿ ಮೀಸಲಾತಿ ಮರು ಸ್ಥಾಪಿಸಿ’ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.
‘ಹಿಂದಿನ ಬಿಜೆಪಿ ಸರ್ಕಾರ, ಮುಸ್ಲಿಮ್ ಸಮುದಾಯವನ್ನು ಹಿಂದುಳಿದ ವರ್ಗಗಳಿಂದ ಹೊರಗಿಡಲು 2ಬಿ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು. ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಾದರೂ ಕಾಂಗ್ರೆಸ್ ಸರ್ಕಾರ ಯಾವುದೇ ನಿರ್ಣಯ ಕೈಗೊಂಡಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
‘ರಾಜ್ಯದಲ್ಲಿ ಶೇ 90ರಷ್ಟು ಹಿಂದುಳಿದ ವರ್ಗದ ಜನರಿದ್ದಾರೆ. ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ, ಅದನ್ನು ಜಾರಿಗೊಳಿಸಬೇಕು. ಈ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಬೇಕು’ ಎಂದು ಆಗ್ರಹಿಸಿದರು
‘ನಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರದಿಂದ ಪ್ರತಿಭಟನೆ ಆರಂಭಿಸಲಾಗಿದೆ. ಇದೇ 13ರವರೆಗೂ ರಾಜ್ಯದಾದ್ಯಂತ ಧರಣಿ, ಪ್ರತಿಭಟನೆ, ವಿಚಾರಸಂಕಿರಣ, ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.