ಬೆಂಗಳೂರು: ನಗರದ ವಿವಿಧ ಭಾಗಗಳ ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಮೂರು ತಿಂಗಳಿಂದ ವೇತನ ದೊರಕಿಲ್ಲ ಎಂಬ ದೂರು ಕೇಳಿಬಂದಿದೆ.
ನಗರದ ದಕ್ಷಿಣ ವಿಭಾಗದ ಶಿಕ್ಷಕರು ಬಗ್ಗೆ `ಪ್ರಜಾವಾಣಿ'ಗೆ ಕರೆ ಮಾಡಿ, ಕಳೆದ ಮೂರು ತಿಂಗಳಿಂದ ವೇತನವನ್ನು ನೀಡುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
`ವೇತನ ದೊರಕದೆ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ನಮ್ಮ ಮನವಿಗೆ ಹಿರಿಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ' ಎಂದು ಹೆಸರು ಹೇಳಲಿಚ್ಚಿಸದ ಶಿಕ್ಷಕರೊಬ್ಬರು ಹೇಳಿದರು.
ಈ ಬಗ್ಗೆ `ಪ್ರಜಾವಾಣಿ' ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಎಸ್.ಆರ್.ಉಮಾಶಂಕರ್ ಅವರನ್ನು ಸಂಪರ್ಕಿಸಿದಾಗ, `ಸರ್ವ ಶಿಕ್ಷಣ ಅಭಿಯಾನದಿಂದ ಹಣ ಬಿಡುಗಡೆ ಮಾಡುವಲ್ಲಿ ಸಮಸ್ಯೆ ಉಂಟಾಗಿದ್ದರಿಂದ ಕಳೆದ ವರ್ಷ ವೇತನ ನೀಡುವಲ್ಲಿ ವಿಳಂಬವಾಗಿತ್ತು. ಆದರೆ, ಡಿಸೆಂಬರ್ ನಂತರ ಸಮರ್ಪಕವಾಗಿ ವೇತನ ನೀಡಲಾಗುತ್ತಿದೆ. ನಗರದ ದಕ್ಷಿಣ ವಿಭಾಗದಲ್ಲಿ ವೇತನ ಬಿಡುಗಡೆಯ ತೊಂದರೆಗಳಿದ್ದಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.