ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಮತ್ತೆ 49 ಮಂದಿ ಮೃತಪಟ್ಟಿರುವುದು ಭಾನುವಾರ ದೃಢಪಟ್ಟಿದ್ದು, ನಗರದಲ್ಲಿ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 1,444ಕ್ಕೆ ಏರಿಕೆಯಾಗಿದೆ.
ಕೋವಿಡ್ ಪೀಡಿತರಲ್ಲಿ 16 ದಿನಗಳಲ್ಲಿ 415 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ. ಹೊಸದಾಗಿ 2,131 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 89 ಸಾವಿರ ದಾಟಿದೆ. 48 ಗಂಟೆಗಳಲ್ಲಿ 5,626 ಮಂದಿ ಸೋಂಕಿತರಾಗಿದ್ದಾರೆ. ಈ ತಿಂಗಳು ಪ್ರತಿನಿತ್ಯ ಸರಾಸರಿ 2,141 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸದ್ಯ 34 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸೋಂಕಿತರಲ್ಲಿ ಮತ್ತೆ 2,356 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ಈವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 53 ಸಾವಿರ ದಾಟಿದೆ. 16 ದಿನಗಳಲ್ಲಿ 36,886 ಮಂದಿ ಚೇತರಿಸಿಕೊಂಡಿದ್ದಾರೆ.
ಕೋವಿಡ್: ಪತ್ರಕರ್ತ ಸಾವು
ಕೋವಿಡ್ನಿಂದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ (50) ಅವರು ಭಾನುವಾರ ಮೃತಪಟ್ಟಿದ್ದಾರೆ. ನಗರದಲ್ಲಿ ಕೋವಿಡ್ನಿಂದಾಗಿ ಮೃತಪಟ್ಟ ನಾಲ್ಕನೇ ಪತ್ರಕರ್ತ ಇವರು. ಪ್ರಸ್ತುತ ಅವರು ‘ಸಂಯುಕ್ತ ಕರ್ನಾಟಕ’ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಮ್ಮು, ಜ್ವರ, ನೆಗಡಿಯಿಂದಾಗಿ ಅವರ ಆರೋಗ್ಯದ ಸ್ಥಿತಿ ಬಿಗಡಾಯಿಸಿದ ಕಾರಣಶನಿವಾರ ಮಧ್ಯಾಹ್ನ 3.30ರ ವೇಳೆಗೆ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್ ಪರೀಕ್ಷೆ ಕೂಡ ನಡೆಸಲಾಗಿತ್ತು. ನಗರದ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ನಗರದ ಕೋವಿಡ್ ಪ್ರಕರಣಗಳ ಅಂಕಿ–ಅಂಶ
ಒಟ್ಟು ಪ್ರಕರಣಗಳು;89,811
ಗುಣಮುಖರಾದವರು;53,782
ಸಕ್ರಿಯ ಪ್ರಕರಣಗಳು; 34,584
ಮೃತಪಟ್ಟವರು; 1,444
ದಿನದ ಏರಿಕೆ;2,131
ಗುಣಮುಖರು;2,356
ಮೃತಪಟ್ಟವರು;49
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.