ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ರಾಷ್ಟ್ರೀಯ ಹಬ್ಬಗಳು, ನಾಲ್ಕನೇ ಶನಿವಾರ ಹಾಗೂ ಎಲ್ಲ ಸರ್ಕಾರಿ ರಜಾ ದಿನದಂದು ವಾಹನ ಸಂಚಾರ ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ಪ್ರತಿ ಭಾನುವಾರ ಹಾಗೂ ಎರಡನೇ ಶನಿವಾರದಂದು ಈಗಾಗಲೇ ಉದ್ಯಾನದಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ನಾಲ್ಕನೇ ಶನಿವಾರ ಹಾಗೂ ರಾಷ್ಟ್ರೀಯ ಹಬ್ಬಗಳ ದಿನಗಳಂದು ಸಂಚಾರ ನಿಷೇಧ ಕೋರಿ ತೋಟಗಾರಿಕೆ ಇಲಾಖೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಪೊಲೀಸ್ ಇಲಾಖೆ ಈ ಆದೇಶಹೊರಡಿಸಿದೆ.
‘ಉದ್ಯಾನದ ಪರಿಸರಕ್ಕೆ ಹಾನಿ ತಡೆಯುವ ಉದ್ದೇಶದಿಂದ ವಾಹನ ಸಂಚಾರ ನಿಷೇಧ ಮಾಡುವಂತೆ ತೋಟಗಾರಿಕೆ ಇಲಾಖೆಯ ನಿರ್ದೇಶಕರಿಗೆ ನಾಲ್ಕು ತಿಂಗಳ ಹಿಂದೆ ಪತ್ರ ಬರೆದಿದ್ದೆ. ಈ ಕುರಿತು ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ನಿಷೇಧ ಈ ವಾರದಿಂದಲೇ ಜಾರಿಯಾಗಿದೆ’ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ (ಕಬ್ಬನ್ ಉದ್ಯಾನ) ಜಿ.ಕುಸುಮಾ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.