ADVERTISEMENT

5 ವರ್ಷದಲ್ಲಿ ಬಾಲ ಕಾರ್ಮಿಕ ಮುಕ್ತ ರಾಜ್ಯ

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ l ಸಂತೋಷ್‌ ಲಾಡ್‌ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 12 ಜೂನ್ 2017, 19:30 IST
Last Updated 12 ಜೂನ್ 2017, 19:30 IST
ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತರಾಗಿ ಶಾಲೆಗೆ ಸೇರಿದ ಮಕ್ಕಳೊಂದಿಗೆ ಮಾತನಾಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್‌. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಬಿಎಂಪಿ ಮೇಯರ್‌ ಜಿ. ಪದ್ಮಾವತಿ ಇದ್ದರು  –ಪ್ರಜಾವಾಣಿ ಚಿತ್ರ
ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತರಾಗಿ ಶಾಲೆಗೆ ಸೇರಿದ ಮಕ್ಕಳೊಂದಿಗೆ ಮಾತನಾಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್‌. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಬಿಎಂಪಿ ಮೇಯರ್‌ ಜಿ. ಪದ್ಮಾವತಿ ಇದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಮುಂದಿನ ಐದು ವರ್ಷದಲ್ಲಿ ಕರ್ನಾಟಕ ಬಾಲ ಕಾರ್ಮಿಕ ಮುಕ್ತ ರಾಜ್ಯವಾಗಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕಾರ್ಮಿಕ ಇಲಾಖೆ  ಸೋಮವಾರ ಏರ್ಪಡಿಸಿದ್ದ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ’ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನಾ  ಪರಿಷ್ಕೃತ ಕ್ರಿಯಾ ಯೋಜನೆ’ಯನ್ನು ಪ್ರಸಕ್ತ ಸಾಲಿನಲ್ಲಿ ಜಾರಿಗೆ ತರಲಾಗಿದೆ. ಅನುಷ್ಠಾನಕ್ಕಾಗಿ ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ಸಹಕಾರ ಪಡೆಯಲಾಗಿದೆ ಎಂದು ಹೇಳಿದರು.

ADVERTISEMENT

ಗ್ರಾಮೀಣ ಪ್ರದೇಶದಿಂದ ನಗರಕ್ಕೆ ವಲಸೆ ಬರುತ್ತಿರುವ ಕಾರ್ಮಿಕರ ಮಕ್ಕಳು ದುಡಿಮೆಗೆ ತೊಡಗಿಕೊಳ್ಳುತ್ತಿದ್ದಾರೆ. ಇದರಿಂದಾಗಿ ನಗರ ಪ್ರದೇಶದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ.

2001ರಲ್ಲಿ ಶೇ 2.1ರಷ್ಟಿದ್ದ ಬಾಲ ಕಾರ್ಮಿಕರ ಸಂಖ್ಯೆ 2011ರ ವೇಳೆಗೆ 2.9ಕ್ಕೆ ಏರಿಕೆಯಾಗಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಶೇ 5.9ರಿಂದ ಶೇ 4.3ಕ್ಕೆ ಇಳಿಕೆಯಾಗಿದೆ ಎಂದು ವಿವರಿಸಿದರು.

ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 10ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ, ಬಿಹಾರ, ರಾಜಸ್ತಾನ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳದಲ್ಲೇ ಶೇ 78.39ರಷ್ಟು ಬಾಲ ಕಾರ್ಮಿಕರಿದ್ದಾರೆ ಎಂದು ಹೇಳಿದರು.

ಮೊಬೈಲ್‌ ಆ್ಯಪ್‌: ಬಾಲ ಕಾರ್ಮಿಕರ ಮೇಲೆ ನಿಗಾ ಇಡಲು ಮೊಬೈಲ್‌ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಂತೋಷ್ ಲಾಡ್ ತಿಳಿಸಿದರು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ದುಡಿಮೆಯಲ್ಲಿ ತೊಡಗಿರುವುದು ಪತ್ತೆಯಾದರೆ ಅವರನ್ನು ಕರೆ ತಂದು ಮನಪರಿವರ್ತಿಸಿ ಶಾಲೆಗೆ ಸೇರಿಸಲಾಗುತ್ತದೆ.

ಅವರು ಪೂರ್ಣ ಪ್ರಮಾಣದಲ್ಲಿ ಶಿಕ್ಷಣ  ಪಡೆಯುತ್ತಿದ್ದಾರೋ ಇಲ್ಲವೋ ಎಂಬುದನ್ನು ಈ ಆ್ಯಪ್ ಮೂಲಕ ನಿರ್ವಹಣೆ ಮಾಡಲಾಗುತ್ತದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.