ಬೆಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಆರೋಪಿಗಳ ಮೇಲೆ ಹೊರಿಸಿರುವ ಆರೋಪಗಳನ್ನು ಕೈಬಿಡಲು ರಾಷ್ಟ್ರೀಯ ತನಿಖಾ ಸಂಸ್ಥೆಡ (ಎನ್ಐಎ) ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಆರೋಪಿಗಳು ಉಗ್ರವಾದಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಆರೋಪಿಸಿ ಎನ್ಐಎ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಆರೋಪ ಕೈಬಿಡುವಂತೆ ಕೋರಿ ಐದನೇ ಆರೋಪಿ ಅಜೀಂ ಷರೀಫ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಾಲಯ, ಪ್ರಕರಣದ ಇತರ ಆರೋಪಿಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಿದೆ.
ಎನ್ಐಎ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿರುವ ಸಾಕ್ಷ್ಯಗಳು ಪ್ರಬಲವಾಗಿವೆ. ಹೀಗಾಗಿ ಆರೋಪಿಗಳ ವಾದವನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.
ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ದೂರವಾಣಿ ಸಂಭಾಷಣೆ ವಿವರ, ನಿರ್ದಿಷ್ಠ ಸಂಘಟನೆಯ ಕಾರ್ಯಕರ್ತರಲ್ಲಿ ಭೀತಿ ಮೂಡಿಸಲು ಈ ಹತ್ಯೆ ಮಾಡಿರುವ ಕುರಿತಂತೆ ಸಾಕ್ಷ್ಯಗಳು ಲಭ್ಯವಾಗಿವೆ. ಹೀಗಾಗಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಎನ್ಐಎ ವಕೀಲ ಪಿ. ಪ್ರಸನ್ನಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.
2016ರ ಅಕ್ಟೋಬರ್ 16ರಂದು ಶಿವಾಜಿನಗರದ ಕಾಮರಾಜ ರಸ್ತೆಯಲ್ಲಿ ರುದ್ರೇಶ್ ಹತ್ಯೆ ನಡೆದಿತ್ತು. ಎನ್ಐಎ ಅಧಿಕಾರಿಗಳು 2017ರ ಏಪ್ರಿಲ್ 22ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.