ADVERTISEMENT

ಅಧಿಕಾರಿಗಳು ಕಚೇರಿಯಲ್ಲಿ – ಫ್ಲೆಕ್ಸ್‌ ಬೀದಿಯಲ್ಲಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 20:00 IST
Last Updated 4 ಜನವರಿ 2018, 20:00 IST
ರಸೆಲ್ ಮಾರ್ಕೆಟ್ ಬಳಿ
ರಸೆಲ್ ಮಾರ್ಕೆಟ್ ಬಳಿ   

ಬೆಂಗಳೂರು: ಫೆಬ್ರುವರಿಯೊಳಗೆ ಇಡೀ ನಗರ ಫ್ಲೆಕ್ಸ್‌ ಮತ್ತು ಹೋರ್ಡಿಂಗ್ಸ್‌ ಮುಕ್ತವಾಗಲಿದೆ ಎಂದು ಮೇಯರ್‌ ಆರ್‌.ಸಂಪತ್‌ರಾಜ್‌ ತಿಳಿಸಿದ್ದಾರೆ.

‘ಕೃಷಿ ಸಚಿವ ಕೃಷ್ಣಬೈರೇಗೌಡ ಮತ್ತು ಯಲಹಂಕ ಶಾಸಕ ಎಸ್‌.ಆರ್. ವಿಶ್ವನಾಥ್‌ ಅವರು ತಮ್ಮ ಕ್ಷೇತ್ರಗಳಲ್ಲಿ ಖುದ್ದು ನಿಂತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಾರೆ. ಪಾಲಿಕೆ ಸದಸ್ಯರು, ಶಾಸಕರು, ಸಂಸದರು ಹಾಗೂ ಸಚಿವರಿಗೆ ಫ್ಲೆಕ್ಸ್‌ ಹಾಕಿಸಿಕೊಳ್ಳುವ ಆಸಕ್ತಿ ಇಲ್ಲ. ಆದರೆ, ಬೆಂಬಲಿಗರು ಮತ್ತು ಅಭಿಮಾನಿಗಳಿಗೆ ಈ ಖಯಾಲಿ ಇದೆ. ಈ ಸಮಸ್ಯೆಗೆ ಮುಕ್ತಿ ಕಾಣಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಗಡುವು ವಿಸ್ತರಣೆ: ಅನಧಿಕೃತ ಜಾಹೀರಾತು ಫಲಕ ತೆರವಿಗೆ ನೀಡಿದ್ದ ಗಡುವು ವಿಸ್ತರಿಸಲಾಗಿದೆ. ಜನವರಿ 6ರೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಆಯುಕ್ತರಿಗೆ ಸೂಚನೆ ಕೊಡಲಾಗಿದೆ. ಒಂದು ವೇಳೆ ಅಷ್ಟರಲ್ಲಿ ಕ್ರಮ ಕೈಗೊಳ್ಳದಿದ್ದರೆ ಸಂಬಂಧಿಸಿದವರ ತಲೆದಂಡವೂ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಜಾಹೀರಾತು ಫಲಕಗಳ ಅಳವಡಿಕೆಗೆ ಅನುಮತಿ ನೀಡುವುದು ಮತ್ತು ನಿಗಾ ವಹಿಸುವ ಅಧಿಕಾರವನ್ನು ಕೇಂದ್ರ ಕಚೇರಿಯಲ್ಲಿನ ಜಾಹೀರಾತು ವಿಭಾಗಕ್ಕೆ ನೀಡಲು ನಿರ್ಧರಿಸಲಾಗಿದೆ. ಜನವರಿ 6ರಂದು ಮತ್ತೊಮ್ಮೆ ಸಭೆ ಕರೆದು, ತೀರ್ಮಾನಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ತೆರವು ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮೇಯರ್ ಅವರು ಪಾಲಿಕೆ ಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಈ ಆದೇಶ ನೀಡಿ ವಾರ ಕಳೆದರೂ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಗೂ ಹೋರ್ಡಿಂಗ್ಸ್‌ ಹಾವಳಿ ನಿಯಂತ್ರಣಕ್ಕೆ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.