ADVERTISEMENT

ನಕಲಿ ದಾಖಲೆ ನೀಡಿದ ಆರೋಪ; ಖರೋಲ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 5 ಜನವರಿ 2018, 19:44 IST
Last Updated 5 ಜನವರಿ 2018, 19:44 IST
ಖರೋಲ
ಖರೋಲ   

ಬೆಂಗಳೂರು: ‘ಐಎಎಸ್‌ ಅಧಿಕಾರಿ ಪ್ರದೀಪ್‌ ಸಿಂಗ್‌ ಖರೋಲ ಅವರು ಕೇಂದ್ರ ಸೇವೆಗೆ ನಿಯೋಜನೆಗೊಳ್ಳಲು ನಕಲಿ ದಾಖಲೆಗಳನ್ನು ನೀಡಿದ್ದಾರೆ’ ಎಂದು ಆರೋಪಿಸಿ ಕನಕಪುರದ ಆರ್‌ಟಿಐ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಅವರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ.

‘ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಖರೋಲ, ಸದ್ಯ ಏರ್‌ ಇಂಡಿಯಾ ಮುಖ್ಯಸ್ಥರಾಗಿದ್ದಾರೆ. ರಾಜ್ಯ ಸೇವೆಯಿಂದ ಕೇಂದ್ರ ಸರ್ಕಾರದ ಸೇವೆಗೆ ಹೋಗುವ ಅಧಿಕಾರಿಯ ವಿರುದ್ಧ ಯಾವುದೇ ಕ್ರಿಮಿನಲ್‌ ಮೊಕದ್ದಮೆ ಇರಬಾರದೆಂಬ ನಿಯಮವಿದೆ. ಆದರೆ, ಖರೋಲ ಅವರ ಮೇಲೆ 4ನೇ ಎಸಿಎಂಎಂ ನ್ಯಾಯಾಲಯದಲ್ಲಿ ಪ್ರಕರಣವಿದೆ (ಸಂಖ್ಯೆ 151/17). ಅಷ್ಟಾದರೂ ಅವರು ಕೇಂದ್ರ ಸೇವೆಗೆ ಹೋಗಿದ್ದಾರೆ’ ಎಂದು ದಿನೇಶ್‌ ದೂರಿದ್ದಾರೆ.

‘ಯಾವುದೇ ಪ್ರಕರಣಗಳಿಲ್ಲವೆಂದು ಅವರು ದಾಖಲೆ ನೀಡಿದ್ದಾರೆ. ಅದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ ಚಂದ್ರ ಖುಂಟಿಅ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಕಾರ್ಯದರ್ಶಿ ಅನಿಲ್ ಕುಮಾರ್ ಸಹಕಾರ ನೀಡಿದ್ದಾರೆ. ಈ ಮೂವರ ವಿರುದ್ಧ ತನಿಖೆ ನಡೆಸಬೇಕು’ ಎಂದು  ಅವರು ಕೋರಿದ್ದಾರೆ.

ADVERTISEMENT

ವಿಧಾನಸೌಧ ಪೊಲೀಸರು, ‘ದೂರು ದಾಖಲಿಸಿಕೊಳ್ಳುವ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.