ADVERTISEMENT

‘ದೌರ್ಜನ್ಯ ಎಸಗಿದವರ ಗಡೀಪಾರು ಮಾಡಿ’

​ಪ್ರಜಾವಾಣಿ ವಾರ್ತೆ
Published 6 ಜನವರಿ 2018, 20:00 IST
Last Updated 6 ಜನವರಿ 2018, 20:00 IST

ಹೊಸಕೋಟೆ: ಮಹಾರಾಷ್ಟ್ರದಲ್ಲಿ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದ ದಲಿತರ ಮೇಲೆ ಸಂಘ ಪರಿವಾರ ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ತಾಲ್ಲೂಕಿನ ಪ್ರಗತಿ ಪರ ದಲಿತ ಸಂಘಟನೆಗಳ ಒಕ್ಕೂಟ ಮತ್ತು ಯುವಶಕ್ತಿ ಸೇನೆ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ‘ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂಬ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.

‘ದೇಶದಲ್ಲಿ ದಲಿತರನ್ನು ತುಳಿಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಸಂಚಿನ ಬಗ್ಗೆ ಮಹಾರಾಷ್ಟ್ರ ಸರ್ಕಾರಕ್ಕೆ ಮಾಹಿತಿ ಇದ್ದರೂ ಅದನ್ನು ತಡೆಯುವಲ್ಲಿ ವಿಫಲವಾಗಿದೆ’ ಎಂದರು.

ADVERTISEMENT

‘ಕೃತ್ಯ ನಡೆಸಿದ ಹಿಂದೂ ಸಂಘಟನೆಯನ್ನು ನಿಷೇಧಿಸಿ ಹಾಗೂ ಕೃತ್ಯಕ್ಕೆ ಪ್ರಚೋದನೆ ನೀಡಿದವರನ್ನು ಗಡೀಪಾರು ಮಾಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಯುವಶಕ್ತಿ ಸೇನೆ ಅಧ್ಯಕ್ಷ ವೈ.ಎಸ್ .ಎಂ.ಮಂಜುನಾಥ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪಿ.ಚಿನ್ನಸ್ವಾಮಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.