ADVERTISEMENT

22ರಿಂದ ಹುಲಿ ಗಣತಿ ಕಾರ್ಯ

​ಪ್ರಜಾವಾಣಿ ವಾರ್ತೆ
Published 8 ಜನವರಿ 2018, 19:30 IST
Last Updated 8 ಜನವರಿ 2018, 19:30 IST
22ರಿಂದ ಹುಲಿ ಗಣತಿ ಕಾರ್ಯ
22ರಿಂದ ಹುಲಿ ಗಣತಿ ಕಾರ್ಯ   

ಆನೇಕಲ್‌: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಜ.22ರಿಂದ ನಡೆಯಲಿರುವ ಹುಲಿ ಗಣತಿ ಹಿನ್ನೆಲೆಯಲ್ಲಿ ಗಣತಿದಾರರಿಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಜಂಗಲ್‌ ಲಾಡ್ಜ್‌ನಲ್ಲಿ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕಾರ್ಯಾಗಾರವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್‌ಕುಮಾರ್ ಮೀನಾ ಉದ್ಘಾಟಿಸಿದರು. ಹುಲಿ ಗಣತಿಯನ್ನು ಪಾರದರ್ಶಕವಾಗಿ ಹಾಗೂ ನಿಖರವಾಗಿ ಮಾಡುವ ಸಲುವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿಕೊಟ್ಟರು.

ಸಂಪನ್ಮೂಲ ವ್ಯಕ್ತಿಗಳಿಂದ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು. ಗಣತಿಯ ಮೊದಲ ದಿನ ಹೆಜ್ಜೆ ಗುರುತು, ವೀಕ್ಷಣೆ, ಗಡಿ ಗುರುತಿಸುವಿಕೆ ಮತ್ತಿತರ ಮಾಹಿತಿಗಳನ್ನು ಕಾರ್ಯಾಗಾರದಲ್ಲಿ ತಿಳಿಸಲಾಯಿತು. ಬನ್ನೇರುಘಟ್ಟ ಮತ್ತು ರಾಮನಗರ ವಿಭಾಗದ 100 ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ 10 ಸ್ವಯಂಸೇವಕರು ಪಾಲ್ಗೊಂಡಿದ್ದರು.

ADVERTISEMENT

ಉಪಅರಣ್ಯ ಸಂರಕ್ಷಣಾಧಿಕಾರಿ ಜಾವೇದ್‌ ಮಮ್ತಾಜ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್.ಸುರೇಶ್, ರಾಮಕೃಷ್ಣ ಹಾಜರಿದ್ದರು.

5 ಹುಲಿ ಯೋಜನೆಗಳಲ್ಲೂ ಕಾರ್ಯಾಗಾರ

ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ, ನಾಗರಹೊಳೆ, ಭದ್ರಾ, ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಅಭಯಾರಣ್ಯ, ದಾಂಡೇಲಿ ಕಾಳಿ ವನ್ಯಜೀವಿ ಅಭಯಾರಣ್ಯಗಳಲ್ಲೂ ಹುಲಿ ಗಣತಿ ತರಬೇತಿ ಕಾರ್ಯಾಗಾರ ನಡೆಯಿತು ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್‌ಕುಮಾರ್ ಮೀನಾ ತಿಳಿಸಿದರು.

ಕುದುರೆಮುಖ ರಾಷ್ಟ್ರೀಯ ಉದ್ಯಾನ, ಪುಷ್ಪಗಿರಿ, ಬ್ರಹ್ಮಗಿರಿ ಹಾಗೂ ತಲಕಾವೇರಿ ವನ್ಯಧಾಮಗಳಲ್ಲೂ ಕಾರ್ಯಾಗಾರ ನಡೆದಿದೆ. 418 ಗಸ್ತು ಪ್ರದೇಶ ಒಳಗೊಂಡಂತೆ 251 ಸ್ವಯಂ ಸೇವಕರು ಹಾಗೂ 1,003 ಸಿಬ್ಬಂದಿಗೆ ತರಬೇತಿ ನೀಡಲಾಯಿತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.