ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಜಿಲ್ಲಾಧಿಕಾರಿ ಕಚೇರಿ ಮುಂದೆ ಇದೇ 17 ರಂದು ಪ್ರತಿಭಟನೆ ನಡೆಸಲು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ ನಿರ್ಧರಿಸಿದೆ.
ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ಅಧ್ಯಕ್ಷ ಜಿ.ಆರ್.ಶಿವಶಂಕರ್, ‘ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡುವ ಮಾತೃಪೂರ್ಣ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಲು ಅಂಗನವಾಡಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಿಲ್ಲ. ಇದರಿಂದಾಗಿ ಯೋಜನೆ ವಿಫಲವಾಗಿದೆ’ ಎಂದರು.
ಆಹಾರ ಸೇವಿಸಲು ಗರ್ಭಿಣಿಯರು ಹಾಗೂ ಬಾಣಂತಿಯರು ಅಂಗನವಾಡಿ ಕೇಂದ್ರಗಳಿಗೆ ಬರಬೇಕಿದೆ. ಅದಕ್ಕೆ ಅವರ ಮನೆಯ ಹಿರಿಯರು ಒಪ್ಪುತ್ತಿಲ್ಲ. ಮನೆಯಿಂದ 2–3 ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುತ್ತಿಲ್ಲ. ಹೀಗಾಗಿ, ತಯಾರಿಸಿದ ಬಹುತೇಕ ಆಹಾರ ವ್ಯರ್ಥವಾಗುತ್ತಿದೆ ಎಂದು ಸಮಸ್ಯೆಯನ್ನು ಬಿಚ್ಚಿಟ್ಟರು.
ಪ್ರಮುಖ ಬೇಡಿಕೆಗಳು:
* ಫಲಾನುಭವಿಗಳ ಮನೆಗೆ ಆಹಾರ ತಲುಪಿಸಬೇಕು
* ಅಂಗನವಾಡಿ ಕೇಂದ್ರಗಳಲ್ಲಿ ಮೂಲಸೌಕರ್ಯ ಒದಗಿಸಬೇಕು
* 34 ಸಾವಿರ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಕಲ್ಪಿಸಬೇಕು.
* ಸಿಬ್ಬಂದಿಗೆ ಕನಿಷ್ಠ ವೇತನ ನಿಗದಿ ಮಾಡಬೇಕು
* ಅಂಗನವಾಡಿ ಕೇಂದ್ರಗಳ ಸಮಯವನ್ನು ಹಿಂದಿನಂತೆ ಜಾರಿ ಮಾಡಬೇಕು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.