ಬೆಂಗಳೂರು: ‘ಲೋಕಾಯುಕ್ತ ಸಂಸ್ಥೆಯ ವಾರ್ಷಿಕ ಲೆಕ್ಕಪತ್ರ ವರದಿ ಸಲ್ಲಿಕೆ ವಿಳಂಬಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ರಿಜಿಸ್ಟ್ರಾರ್ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಗೆ ಮುಂದಾಗಬಾರದು’ ಎಂದು ವಿಧಾನಸಭೆ ಸ್ಪೀಕರ್ ಮತ್ತು ರಾಜ್ಯ ವಿಧಾನಸಭಾ ಹಕ್ಕು ಬಾಧ್ಯತಾ ಸಮಿತಿಗೆ ಹೈಕೋರ್ಟ್ ಆದೇಶಿಸಿದೆ.
ಲೋಕಾಯುಕ್ತ ರಿಜಿಸ್ಟ್ರಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಈ ಕುರಿತಂತೆ ಮಧ್ಯಂತರ ಆದೇಶ ನೀಡಿದೆ.
‘ಸಮಿತಿಯ ಶಿಫಾರಸು ಮೇರೆಗೆ ಯಾವುದೇ ಕ್ರಮ ಜರುಗಿಸಬಾರದು’ ಎಂದು ವಿಧಾನಸಭೆ ಸ್ಪೀಕರ್ ಮತ್ತು ವಿಧಾನಸಭೆ ಹಕ್ಕು ಬಾಧ್ಯತಾ ಸಮಿತಿಗೆ ತಾಕೀತು ಮಾಡಿದೆ.
ಪ್ರಕರಣದ ಪ್ರತಿವಾದಿಗಳಾದ ವಿಧಾನಸಭೆ ಸ್ಪೀಕರ್, ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷ, ಕಾಗದ ಪತ್ರ ಸಮಿತಿ ಅಧ್ಯಕ್ಷ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಲೋಕಾಯುಕ್ತ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆ ನಡೆಸಲು ಕಾಗದ ಪತ್ರಗಳ ಸಮಿತಿ ವಿಧಾನಸಭೆ ಸ್ಪೀಕರ್ ಅವರಿಗೆ ಶಿಫಾರಸು ಮಾಡಿತ್ತು. ಇದನ್ನು ಲೋಕಾಯುಕ್ತ ಹಾಗೂ ಲೋಕಾಯುಕ್ತ ರಿಜಿಸ್ಟ್ರಾರ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.