ಬೆಂಗಳೂರು: ನೀರಿನ ಬಗ್ಗೆ ಜಾಗೃತಿ ಮೂಡಿಸಲು ಇದೇ 19ರಂದು ಕುವೆಂಪು ಕಲಾ ಕ್ಷೇತ್ರದಲ್ಲಿ ಬೆಳಿಗ್ಗೆ 10.30ಕ್ಕೆ ‘ನೀರು– ನಮ್ಮ ಹಕ್ಕು’ ಎಂಬ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಮೇಕೆ ದಾಟು ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ. ಮಲ್ಲಪ್ಪ ತಿಳಿಸಿದರು.
ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಯಲುಸೀಮೆಯ 6 ಜಿಲ್ಲೆಗಳ ನೀರಿನ ಬವಣೆ ನೀಗಿಸದೆ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಪಶ್ಚಿಮ ಘಟ್ಟಗಳ ನದಿಗಳಿಗೆ ಸಮರ್ಪಕವಾದ ಅಣೆಕಟ್ಟುಗಳು ಇಲ್ಲದೆ ಕುಡಿಯುವ ನೀರು ಸಮುದ್ರದ ಪಾಲಾಗುತ್ತಿದೆ. ಈ ನೀರನ್ನು ಸಂಗ್ರಹಿಸಿ ಯೋಗ್ಯವಾದ ರೀತಿಯಲ್ಲಿ ಸರಬರಾಜು ಮಾಡಿದರೆ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದರು.
ಶಾಶ್ವತ ನೀರಾವರಿ ಹೋರಾಟ ಸಮಿತಿ, ಮೇಕೆದಾಟು ಜಲಾಶಯ ನಿರ್ಮಾಣ ಹೋರಾಟ ಸಮಿತಿ ಮತ್ತು ಬೆಂಗಳೂರು ಮಹಾನಗರ ನೀರು ಬಳಕೆದಾರರ ಸಮಿತಿ ಸಹಯೋಗದಲ್ಲಿ ಈ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಆದಿಚುಂಚನಗಿರಿ ಕ್ಷೇತ್ರದ ನಿರ್ಮಲಾನಂದನಾಥ ಸ್ವಾಮಿ ಸಾನ್ನಿಧ್ಯ ವಹಿಸಲಿದ್ದಾರೆ. ವಿಶ್ರಾಂತ ನ್ಯಾಯಾಧೀಶರಾದ ಎ.ಜೆ.ಸದಾಶಿವ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.