ಬೆಂಗಳೂರು: ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಏಕರೂಪದ ಸೇವಾ ನಿಯಮಾವಳಿ ಜಾರಿಗೆ ಒತ್ತಾಯಿಸಿ ರಾಜ್ಯದ ಹಾಸ್ಟೆಲ್ಗಳ ’ಡಿ’ ವರ್ಗದ ಹೊರಗುತ್ತಿಗೆ ನೌಕರರು ನಗರದಲ್ಲಿ ಗುರುವಾರದಿಂದ ಧರಣಿ ಆರಂಭಿಸಿದ್ದಾರೆ.
ಸ್ವಾತಂತ್ರ್ಯ ಉದ್ಯಾನ ಎದುರು ಹಮ್ಮಿಕೊಂಡಿರುವ ಧರಣಿಯು ಶುಕ್ರವಾರ ಎರಡನೇ ದಿನ ಪೂರೈಸಿತು. ಪ್ರತಿಭಟನಾಕಾರರು ‘ನಮ್ಮ ನೌಕರಿ ಭದ್ರತಪಡಿಸಿ’ ಹಾಗೂ ‘ನಮ್ಮ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ’ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.
‘ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ವಿದ್ಯಾರ್ಥಿ ನಿಲಯಗಳಲ್ಲಿ ಹಲವು ವರ್ಷಗಳಿಂದ ಸಾವಿರಾರು ನೌಕರರು ಅಡುಗೆ, ಸ್ವಚ್ಛತೆ, ಕಾವಲು ಕೆಲಸ ಮಾಡುತ್ತಿದ್ದಾರೆ. ಅವರಿಗೆಲ್ಲ ಗುತ್ತಿಗೆದಾರರು ಕಿರುಕುಳ ನೀಡುತ್ತಿದ್ದಾರೆ. ನೌಕರಿ ಕಾಯಂ ಮಾಡಿ ಕಿರುಕುಳಕ್ಕೆ ಕಡಿವಾಣ ಹಾಕಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
‘ಹಾಸ್ಟೆಲ್ನ 7 ಸಾವಿರ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯುತ್ತಿದೆ. ಇದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಇದರಿಂದಾಗಿ ನಾವೆಲ್ಲರೂ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದೇವೆ’ ಎಂದು ಹೇಳಿದರು.
ಈಡೇರದ ಭರವಸೆ: ‘ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಈ ಹಿಂದೆ ನಗರದಲ್ಲಿ ಧರಣಿ ನಡೆಸಿದ್ದೆವು. ಆಗ ಅಧಿಕಾರಿಗಳು, ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಅವರು ಮಾತು ತಪ್ಪಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.
‘ಹೊಸದಾಗಿ ನೇಮಕ ಮಾಡಿಕೊಂಡಿರುವ 7 ಸಾವಿರ ಮಂದಿಗೆ ಆದೇಶ ಪತ್ರ ವಿತರಿಸಲು ತಯಾರಿ ನಡೆದಿದೆ. ಅದಕ್ಕಾಗಿ ಜ. 22ರಂದು ಅರಮನೆ ಮೈದಾನದಲ್ಲಿ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ನಮಗೆಲ್ಲ ಅನ್ಯಾಯವಾಗಲಿದೆ. ಅದನ್ನು ಖಂಡಿಸಿ ಧರಣಿ ಹಮ್ಮಿಕೊಂಡಿದ್ದೇವೆ’ ಎಂದರು.
‘ಬೇಡಿಕೆ ಸಂಬಂಧ ಚರ್ಚಿಸಲು ಸಚಿವ ಆಂಜನೇಯ ಅವರು ಕಚೇರಿಗೆ ಕರೆದಿದ್ದರು. ಬೇಡಿಕೆ ಈಡೇರಿಕೆ ಬಗ್ಗೆ ಸ್ಪಷ್ಟ ತೀರ್ಮಾನ ತಿಳಿಸಲಿಲ್ಲ.ಹೀಗಾಗಿ, ಧರಣಿ ಮುಂದುವರಿಯಲಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.