ADVERTISEMENT

‘ಸದಾಶಿವ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ’

​ಪ್ರಜಾವಾಣಿ ವಾರ್ತೆ
Published 21 ಜನವರಿ 2018, 19:43 IST
Last Updated 21 ಜನವರಿ 2018, 19:43 IST

ಬೆಂಗಳೂರು: ಒಳಮೀಸಲಾತಿ ಕುರಿತು ಎ.ಜೆ.ಸದಾಶಿವ ಆಯೋಗ ನೀಡಿರುವ ವರದಿಯನ್ನು ಜಾರಿಗೊಳಿಸಲು ಸರ್ಕಾರವು ಮೀನಮೇಷ ಎಣಿಸುತ್ತಿದೆ. ಈ ವರದಿ ಜಾರಿಗೆ ಒತ್ತಾಯಿಸಿ ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಮಾದಿಗ ಸಂಘಟನೆಗಳ ಒಕ್ಕೂಟ ಸದಸ್ಯ ಪ್ರಶಾಂತ್ ಚಕ್ರವರ್ತಿ ತಿಳಿಸಿದರು.

ಒಕ್ಕೂಟ ವತಿಯಿಂದ ಕೆ.ಆರ್.ಪುರ ಸಮೀಪದ ಆವಲಹಳ್ಳಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಬೆಂಗಳೂರು ಪೂರ್ವ ತಾಲ್ಲೂಕು ಮಾದಿಗರ ಸಮಾವೇಶದ ಪೂರ್ವಸಿದ್ಧತಾ ಸಭೆ’ಯಲ್ಲಿ ಅವರು ಮಾತನಾಡಿದರು.

ಸದಾಶಿವ ವರದಿ ಪ್ರಕಾರ, ಮಾದಿಗ ಸಮುದಾಯಕ್ಕೆ ಶೇ 6ರಷ್ಟು, ದಲಿತರಿಗೆ ಶೇ 5, ಭೋವಿ, ಕೊರಮ, ಕೊರಚ ಮತ್ತು ಲಂಬಾಣಿ ಜಾತಿಗಳಿಗೆ ಶೇ 3, ಅಲೆಮಾರಿ ಸಮುದಾಯಕ್ಕೆ ಶೇ 1ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಲಾಗಿದೆ. ಈ ವರದಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ADVERTISEMENT

ಒಕ್ಕೂಟದ ಸದಸ್ಯ ವೇಣು ಮಾದರ, ‘ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ 1 ಲಕ್ಷಕ್ಕಿಂತ ಹೆಚ್ಚಿನ ಮಂದಿ ಇದ್ದಾರೆ. ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಬಲಗೊಳ್ಳಲು ಸದಾಶಿವ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.