ಬೆಂಗಳೂರು: ‘ಚಿಕ್ಕಬಾಣಾವರ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರು ಇಲ್ಲಿನ ಕೆರೆಯ ಕೋಡಿಗಳನ್ನು ಮುಚ್ಚಿ, ಆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.
‘ಕೆರೆಯಲ್ಲಿ ಸಣ್ಣ ಹಾಗೂ ದೊಡ್ಡ ಕೋಡಿಗಳಿವೆ. ಗ್ರಾಮ ಪಂಚಾಯಿತಿಯ ಸದಸ್ಯರ ಜಮೀನುಗಳಿಗೆ ದಾರಿ ಮಾಡುವ ಉದ್ದೇಶದಿಂದ ಈ ಕಾಲುವೆಗಳನ್ನು ಮುಚ್ಚಲಾಗಿದೆ. 10 ವರ್ಷಗಳ ಹಿಂದೆ ಈ ಕಾಲುವೆಗಳಲ್ಲೇ ಬಟ್ಟೆ ಒಗೆಯುತ್ತಿದ್ದೆವು. ಆದರೆ, ಈಗ ಅದಕ್ಕೆ ಅವಕಾಶ ಇಲ್ಲವಾಗಿದೆ’ ಎಂದು ಗ್ರಾಮದ ನಿವಾಸಿ ಸರೋಜಾ ಅಳಲು ತೋಡಿಕೊಂಡರು.
ಕೆರೆಯ ನೀರು ಕಾಲುವೆ ಮೂಲಕ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಲಾರಂಭಿಸಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುತ್ತಿದ್ದೇವೆ. ಕೆರೆಯ ಪಕ್ಕದಲ್ಲೇ ಗ್ರಾಮ ಪಂಚಾಯಿತಿ ಕಚೇರಿ ಇದೆ. ಆದರೆ, ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿ ಹನುಮಂತಯ್ಯ ದೂರಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮತಿ, ‘ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.