ADVERTISEMENT

‘ಹೊಸ ಆವಿಷ್ಕಾರದಲ್ಲಿ ತೊಡಗಿಸಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 22 ಜನವರಿ 2018, 19:30 IST
Last Updated 22 ಜನವರಿ 2018, 19:30 IST
ಗುರುರಾಜ ದೇಶಪಾಂಡೆ ಹಾಗೂ ಎಸ್‌.ಜಗದೀಶ್‌ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವೂಡೇ ಪಿ.ಕೃಷ್ಣ ಇದ್ದಾರೆ
ಗುರುರಾಜ ದೇಶಪಾಂಡೆ ಹಾಗೂ ಎಸ್‌.ಜಗದೀಶ್‌ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವೂಡೇ ಪಿ.ಕೃಷ್ಣ ಇದ್ದಾರೆ   

ಬೆಂಗಳೂರು: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಅಧ್ಯಯನದ ಜತೆಗೆ ನೂತನ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು. ಆಗ ಮಾತ್ರ ದೇಶವು ಪ್ರಗತಿಪಥದತ್ತ ಸಾಗಲು ಸಾಧ್ಯ’ ಎಂದು ದೇಶಪಾಂಡೆ ಫೌಂಡೇಶನ್‌ ಅಧ್ಯಕ್ಷ ಗುರುರಾಜ ದೇಶಪಾಂಡೆ ತಿಳಿಸಿದರು.

ಯಲಹಂಕದ ಶೇಷಾದ್ರಿಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮಾಚರಣೆ ಹಾಗೂ ಕೌಶಲ ಅಭಿವೃದ್ಧಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

‘ಇಂದು ತಂತ್ರಜ್ಞಾನ ಎಲ್ಲ ರಂಗಗಳಲ್ಲಿಯೂ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಇದಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದ ಜತೆಗೆ ನೂತನ ಯೋಜನೆ, ತಂತ್ರಜ್ಞಾನ ಹಾಗೂ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಇನ್ವೆಂಚರ್ಸ್‌ ಕ್ಯಾಪಿಟಲ್‌ ಪಾರ್ಟ್‌ನರ್ಸ್‌ ಕೈಗಾರಿಕಾ ಸಲಹೆಗಾರ ಎಸ್‌.ಜಗದೀಶ್‌, ‘ದೇಶದ ಅಭಿವೃದ್ಧಿಯಲ್ಲಿ ತಂತ್ರಜ್ಞಾನ, ಸಂವಹನ ಕೌಶಲ ಹಾಗೂ ಜಾಗತಿಕ ಪ್ರಭಾವ ಅತಿಮುಖ್ಯ. ಈ ಹಿಂದೆ ಇವೆಲ್ಲವೂ ಇರದ ಕಾರಣ ಅಂದಿನ ಜನರಲ್ಲಿ ಎಷ್ಟೇ ಜ್ಞಾನವಿದ್ದರೂ ದೊಡ್ಡಮಟ್ಟದ ಅಭಿವೃದ್ಧಿ ಸಾಧ್ಯವಾಗುತ್ತಿರಲಿಲ್ಲ. ಆದರೆ, ಇಂದು ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಶೇಷಾದ್ರಿಪುರ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವೂಡೇ ಪಿ.ಕೃಷ್ಣ, ‘ಎಲ್ಲೆಡೆ ಕೌಶಲ ಅಭಿವೃದ್ಧಿ ಕೇಂದ್ರ ತೆರೆದು, ತರಬೇತಿ ನೀಡಲಾಗುವುದು. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.