ಬೆಂಗಳೂರು: ಐಷಾರಾಮಿ ಜೀವನ ನಡೆಸುವ ಸಲುವಾಗಿ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ಪುರದ ನಯೀಮ್ ಖಾನ್ ಅಲಿಯಾಸ್ ಸಮೀರ್ ಖಾನ್ (30) ಹಾಗೂ ಮೈಸೂರಿನ ಬಿಲಾಲ್ ಖಾನ್ ಅಲಿಯಾಸ್ ಬಿಲಾಲ್ (30) ಮೃತರು. ಅವರಿಂದ ₹ 14 ಲಕ್ಷ ಮೌಲ್ಯದ 450 ಗ್ರಾಂ ಚಿನ್ನಾಭರಣ ಹಾಗೂ 700 ಗ್ರಾಂ ಬೆಳ್ಳಿಯ ಆಭರಣಗಳನ್ನು ಜಪ್ತಿ ಮಾಡಲಾಗಿದೆ.
2017ರ ಡಿ. 2ರಂದು ರಾತ್ರಿ ವಿಜಯ್ ಕುಮಾರ್ ಎಂಬುವರು ಕುಟುಂಬಸ್ಥರ ಜತೆ ಮದುರೆಗೆ ಹೋಗಿದ್ದರು. ಈ ವೇಳೆ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ ಆರೋಪಿಗಳು ಕಳ್ಳತನ ಮಾಡಿದ್ದರು. ಬಳಿಕ ನೆಲಮಹಡಿಯಲ್ಲಿದ್ದ ಬ್ರಿಜೆಂಡ್ ತಿವಾರಿ ಎಂಬುವರ ಮನೆಯಲ್ಲೂ ಕಳ್ಳತನ ಮಾಡಿದ್ದರು ಎಂದು ಕೊಡಿಗೇಹಳ್ಳಿ ಪೊಲೀಸರು ತಿಳಿಸಿದರು.
‘ಸ್ಥಳೀಯರು ನೀಡಿದ ಮಾಹಿತಿ ಹಾಗೂ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾದ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ವಿಚಾರಣೆ ವೇಳೆ ಅವರು ತಪ್ಪೊಪ್ಪಿಕೊಂಡಿದ್ದಾರೆ. ಠಾಣಾ ವ್ಯಾಪ್ತಿಯಲ್ಲಿ ಐದು ಕಡೆ ಹಾಗೂ ಆಂಧ್ರ ಪ್ರದೇಶದ ಫಲಕನಾಮಾ ಠಾಣಾ ವ್ಯಾಪ್ತಿಯಲ್ಲಿ ಒಂದು ಕಡೆ ಕಳ್ಳತನ ಮಾಡಿದ್ದಾಗಿ ಬಾಯಿ ಬಿಟ್ಟಿದ್ದಾರೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.