ADVERTISEMENT

ಮೋದಿ ಭಾಗವಹಿಸುವ ಕಾರ್ಯಕ್ರಮ ಯಶಸ್ಸಿನ ಚರ್ಚೆ

ಅಮಿತ್‌ ಷಾ ನೇತೃತ್ವದಲ್ಲಿ ಬಿಜೆಪಿ ಮುಖಂಡರ ಸಭೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2018, 19:32 IST
Last Updated 29 ಜನವರಿ 2018, 19:32 IST

ನವದೆಹಲಿ: ಬೆಂಗಳೂರಿನಲ್ಲಿ ಫೆಬ್ರುವರಿ 4ರಂದು ಏರ್ಪಡಿಸಿರುವ ಪಕ್ಷದ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಯಶಸ್ಸಿನ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೋಮವಾರ ರಾತ್ರಿ ರಾಜ್ಯದ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಈ ಸಮಾರಂಭದ ಯಶಸ್ಸಿಗೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸೂಚನೆ ನೀಡಿದ ಅಮಿತ್ ಶಾ, ಪಕ್ಷದ ಎಲ್ಲ ಮುಖಂಡರ ಪಾಲ್ಗೊಳ್ಳುವಿಕೆ ಹಾಗೂ ಜನರನ್ನು ಕರೆತರುವ ಬಗ್ಗೆ ಸೂಚನೆ ನೀಡಿದರು.

ಮುಖಂಡರಾದ ಜಗದೀಶ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ, ಬಿ.ಎಲ್‌. ಸಂತೋಷ್‌, ಆರ್‌.ಅಶೋಕ, ಅರವಿಂದ ಲಿಂಬಾವಳಿ ಸಭೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಇದಕ್ಕೂ ಮೊದಲು ಸಂಜೆ ಕೇಂದ್ರ ಸಚಿವ ಅನಂತಕುಮಾರ್‌ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು, ವಿಧಾನಸಭೆ ಚುನಾವಣೆ ನಿಟ್ಟಿನಲ್ಲಿ ಏರ್ಪಡಿಸಿದ್ದ ಪರಿವರ್ತನಾ ಯಾತ್ರೆಯ ಕುರಿತು ಸಮಾಲೋಚನೆ ನಡೆಸಿದರು.

ಅಮಿತ್‌ ಷಾ ಅವರು ಭಾನುವಾರ ರಾತ್ರಿ ಆಯೋಜಿಸಿದ್ದ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ವಿಧಾನಸಭೆ ಚುನಾವಣೆ ಉಸ್ತುವಾರಿಗಳಾದ ಪೀಯೂಷ್‌ ಗೋಯಲ್‌, ಪ್ರಕಾಶ್ ಜಾವಡೇಕರ್‌, ಪಕ್ಷದ ರಾಜ್ಯ ಉಸ್ತುವಾರಿ ಪಿ.ಮುರುಳೀಧರ ರಾವ್‌, ಬಿ.ಎಲ್‌. ಸಂತೋಷ್‌ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.