ಬೆಂಗಳೂರು: ರಾಜಕಾಲುವೆಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟುವ ವಿಷಯದಲ್ಲಿ ವಿಶೇಷ ಪರಿಣತಿ ಹೊಂದಿರುವ ತಜ್ಞರ ಪಟ್ಟಿಯನ್ನು ಸಿದ್ಧಪಡಿಸಿ ಕೋರ್ಟ್ಗೆ ಸಲ್ಲಿಸುವಂತೆ ಹೈಕೋರ್ಟ್ ಪುನರುಚ್ಚರಿಸಿದೆ.
ಈ ಕುರಿತಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠವು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಜಲಮಂಡಳಿ ಹಾಗೂ ಅರ್ಜಿದಾರರಾದ ಸಿಟಿಜನ್ ಆ್ಯಕ್ಷನ್ ಗ್ರೂಪ್ಗೆ ಬುಧವಾರ ನಿರ್ದೇಶಿಸಿದೆ.
‘ರಾಜಕಾಲುವೆಗಳಿಗೆ ಕೊಳಚೆ ನೀರು ಹರಿಯುವುದನ್ನು ತಡೆಗಟ್ಟಲು ತಜ್ಞರ ಸಮಿತಿಯೊಂದನ್ನು ರಚಿಸುವ ಅಗತ್ಯವಿದೆ. ಆದ್ದರಿಂದ ಬಿಬಿಎಂಪಿ, ಜಲಮಂಡಳಿ ಹಾಗೂ ಅರ್ಜಿದಾರರು ಈ ಕುರಿತಂತೆ ಪರಸ್ಪರ ಚರ್ಚಿಸಬೇಕು. ಈ ವಿಷಯದಲ್ಲಿ ಜಾಗತಿಕ ಮಟ್ಟದಲ್ಲಿ ಅನುಭವ ಹೊಂದಿರುವ ತಜ್ಞರನ್ನು ಗುರುತಿಸಿ ಪಟ್ಟಿಯೊಂದನ್ನು ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ನ್ಯಾಯಪೀಠ ಹೇಳಿತು.
‘ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸುವುದು ಸೂಕ್ತ’ ಎಂದು ನ್ಯಾಯಪೀಠ ಇದೇ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು. ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.