ಬೆಂಗಳೂರು: ಹೈಕೋರ್ಟ್ ಆವರಣದಲ್ಲಿ ‘ಅನಂತು ವರ್ಸಸ್ ನಸ್ರತ್’ ಚಿತ್ರದ ನಾಯಕ ನಟ ವಿನಯ್ ರಾಜ್ಕುಮಾರ್ ಕಾನೂನು ಬಾಹಿರವಾಗಿ ಫೋಟೊ ಶೂಟ್ ನಡೆಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿರುವ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ, ಪ್ರತಿವಾದಿಗಳಾದ ಹೈಕೋರ್ಟ್ ಎಸಿಪಿ ಹಾಗೂ ವಿಧಾನಸೌಧ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
‘ಲಾಂಛನಗಳು ಮತ್ತು ಹೆಸರುಗಳು (ಅನುಚಿತ ನಿಯಂತ್ರಣ) ಕಾಯ್ದೆ-1950ರ ಪ್ರಕಾರ ಸಂಸತ್, ರಾಜ್ಯ ಶಾಸನ ಸಭೆ, ಸುಪ್ರೀಂ ಕೋರ್ಟ್, ರಾಜ್ಯ ಹೈಕೋರ್ಟ್, ಕೇಂದ್ರ ಸಚಿವಾಲಯ ಅಥವಾ ರಾಜ್ಯ ಸಚಿವಾಲಯ ಹಾಗೂ ಇತರೆ ಸರ್ಕಾರಿ ಕಚೇರಿಗಳ ಹೆಸರು ಅಥವಾ ಈ ಮೇಲ್ಕಂಡ ಕಚೇರಿ ಕಟ್ಟಡಗಳ ಚಿತ್ರಗಳನ್ನು ಬಳಸುವುದು ನಿಷಿದ್ಧ. ಈ ನಿಯಮ ಮತ್ತು ಹೈಕೋರ್ಟ್ ಭದ್ರತಾ ವ್ಯವಸ್ಥೆ ಉಲ್ಲಂಘಿಸಿ, ಹೈಕೋರ್ಟ್ ಆವರಣದಲ್ಲಿ ವಿನಯ್ ರಾಜ್ಕುಮಾರ್ ಅವರ ಫೊಟೋ ಶೂಟ್ ನಡೆಸಿದ್ದಾರೆ’ ಎಂಬುದು ಅರ್ಜಿದಾರರ ಆಕ್ಷೇಪ.
‘ಹೈಕೋರ್ಟ್ ಆವರಣ ಮತ್ತು ಬೆಂಗಳೂರು ವಕೀಲರ ಸಂಘದ ಗ್ರಂಥಾಲಯದಲ್ಲಿ 2017ರ ಆಗಸ್ಟ್ 15ರಂದು ನಡೆಸಿರುವ ಈ ಫೋಟೊ ಶೂಟ್ಗೆ ಪೂರ್ವಾನುಮತಿ ಪಡೆದಿಲ್ಲ. ಹಾಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಲು ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಮನವಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.