ADVERTISEMENT

ಎಸ್‌ಸಿ ಪಟ್ಟಿಗೆ ಸೇರಿಸಲು ಮಡಿವಾಳರ ಆಗ್ರಹ

ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಮನವಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2018, 19:58 IST
Last Updated 22 ಫೆಬ್ರುವರಿ 2018, 19:58 IST
ಸ್ವಾತಂತ್ರ್ಯ ಉದ್ಯಾನದಲ್ಲಿ ಮಡಿವಾಳರು ಪ್ರತಿಭಟನೆ ನಡೆಸಿದರು
ಸ್ವಾತಂತ್ರ್ಯ ಉದ್ಯಾನದಲ್ಲಿ ಮಡಿವಾಳರು ಪ್ರತಿಭಟನೆ ನಡೆಸಿದರು   

ಬೆಂಗಳೂರು: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಡಿವಾಳರ ಸಂಘದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ‍್ರತಿಭಟನೆ ನಡೆಸಿದರು.

ಸಂಘದ ಅಧ್ಯಕ್ಷ ಸಿ.ನಂಜಪ್ಪ, ‘ರಾಜ್ಯದಲ್ಲಿ ಮಡಿವಾಳ ಸಮುದಾಯದ 18 ಲಕ್ಷ ಮಂದಿ ಇದ್ದಾರೆ. ಅವರೆಲ್ಲರೂ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಅತ್ಯಂತ ಕೆಳಸ್ತರದಲ್ಲಿದ್ದಾರೆ. ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ, ಈ ಸಮುದಾಯವನ್ನು ಎಸ್‌ಸಿ ಪಟ್ಟಿಗೆ ಸೇರಿಸಬೇಕು’ ಎಂದರು.

‘18 ರಾಜ್ಯಗಳಲ್ಲಿ ಹಾಗೂ 5 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮುದಾಯವನ್ನು ಎಸ್‌ಸಿ ಪಟ್ಟಿಗೆ ಸೇರಿಸಲಾಗಿದೆ. ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸಾಂವಿಧಾನಿಕವಾಗಿ ಅವಕಾಶ ಒದಗಿಸಲಾಗಿದೆ. ರಾಜ್ಯದಲ್ಲೂ ಅದೇ ಮಾದರಿಯಲ್ಲಿ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ಮಡಿವಾಳರ ಸ್ಥಿತಿಗತಿ ಬಗ್ಗೆ ಅಧ್ಯಯನ ನಡೆಸಿ ಡಾ.ಅನ್ನಪೂರ್ಣಮ್ಮ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಆ ವರದಿಯು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರ ಬಳಿ ಇದೆ. ವರದಿ ಜಾರಿಗೊಳಿಸಲು ಸಚಿವರು ಬಿಡುತ್ತಿಲ್ಲ’ ಎಂದು ಕಿಡಿಕಾರಿದರು.

ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ‘ಬೇಡಿಕೆಗಳ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದನ್ನು ಕೈಬಿಡಿ’ ಎಂದು ಪ್ರತಿಭಟನಾಕಾರರ ಮನವೊಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.