ಬೆಂಗಳೂರು: ನಗರ ಪೊಲೀಸ್ ಇಲಾಖೆಯ ಈಶಾನ್ಯ ವಿಭಾಗದಲ್ಲಿ ‘ಪೊಲೀಸ್ ಮಾರ್ಷಲ್’ಗಳಾಗಿ 700 ಮಂದಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.
ಆರೋಹಣ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈಶಾನ್ಯ ವಿಭಾಗ ವ್ಯಾಪ್ತಿಯ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗಿದೆ.
‘ಪೊಲೀಸ್ ಮಾರ್ಷಲ್’ಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್, ‘ಮಾದಕ ವಸ್ತುಗಳನ್ನು ಸೇವಿಸಿದರೆ ಅದರಿಂದ ಆಗುವ ದುಷ್ಪರಿಣಾಮ ಕುರಿತು ಮಾರ್ಷಲ್ಗಳು ಜಾಗೃತಿ ಮೂಡಿಸಲಿದ್ದಾರೆ. ಬೀದಿ ನಾಟಕದ ಮೂಲಕ ಎಚ್ಚರಿಸಬೇಕು’ ಎಂದು ಹೇಳಿದರು.
‘ಪದವಿ ವಿದ್ಯಾರ್ಥಿಗಳನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ. ಇವರು ಪೊಲೀಸರು ಅಲ್ಲ. ಆದರೆ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ. ಮಾದಕ ವಸ್ತುಗಳ ಬೇಡಿಕೆಯನ್ನೇ ತಗ್ಗಿಸಿದರೆ ಪೂರೈಕೆಯೂ ಕಡಿಮೆಯಾಗಲಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಾಗಲಿದೆ’ ಎಂದು ಹೇಳಿದರು.
ಪೂರ್ವವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತ ಮಾತನಾಡಿ, ‘ಇದು ಇಲಾಖೆಯ ಅತ್ಯುತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಹೀಗಾಗಿ, ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಈಶಾನ್ಯ ವಿಭಾಗದಲ್ಲಿ ಯಶಸ್ವಿಯಾದರೆ ರಾಜ್ಯದಾದ್ಯಂತ ಪೊಲೀಸ್ ಮಾರ್ಷಲ್ ವ್ಯವಸ್ಥೆ ಅನುಷ್ಠಾನಕ್ಕೆ ತರುವ ಸಾಧ್ಯತೆಯಿದೆ’ ಎಂದು ಹೇಳಿದರು.
ಡಿಸಿಪಿ ಲಕ್ಷ್ಮಿಪ್ರಸಾದ್, ನಿಮ್ಹಾನ್ಸ್ ನಿರ್ದೇಶಕಿ ಪ್ರತಿಮಾ ಮೂರ್ತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.