ಬೆಂಗಳೂರು: ‘ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರಗಾಲದ ಕಾರಣದಿಂದ ಮುಂದೂಡಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
‘ರೈತ ಸಂಕಟದಲ್ಲಿರುವಾಗ ಸಂತಸ ಆಚರಿಸುವ ಸಮ್ಮೇಳನಕ್ಕೆ ಅರ್ಥವೇ ಇಲ್ಲ. ರಾಜ್ಯದಲ್ಲಿ ಭೂಮಿ ನೀರಿಲ್ಲದೆ ಬಾಯ್ದೆರೆದುಕೊಂಡಿದೆ. ಇಂತಹ ಸಂದರ್ಭದಲ್ಲಿ ಕನ್ನಡದ ಅಕ್ಷರ ಜಾತ್ರೆಯನ್ನು ನಡೆಸುವುದು ಸಮರ್ಪಕವಲ್ಲ. ರಾಜ್ಯದ ಬಹುತೇಕ ಜಿಲ್ಲೆಗಳನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಿದೆ. ಅದರಲ್ಲಿ ಮಂಡ್ಯ ಜಿಲ್ಲೆಯ ಎಲ್ಲ ತಾಲ್ಲೂಕುಗಳಿವೆ. ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ಹೊಂದಿರುವ ಪರಿಷತ್ತು, ಬರಗಾಲದಲ್ಲಿ ಅದ್ದೂರಿ ಸಮ್ಮೇಳನಗಳನ್ನು ಮಾಡುವ ಅವಶ್ಯಕತೆ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಿದೆ’ ಎಂದು ಹೇಳಿದ್ದಾರೆ.
‘ಬರದ ಕಾರಣ ಮೈಸೂರು ದಸರಾ ಸೇರಿದಂತೆ ಎಲ್ಲಾ ಉತ್ಸವಗಳನ್ನು ಸಾಂಕೇತಿಕವಾಗಿ ನಡೆಸಬೇಕು. ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಬರ ಪರಸ್ಥಿತಿಯನ್ನು ಸರ್ಕಾರ ಮತ್ತು ನಾಡಿನ ಜನರು ಸಮರ್ಥವಾಗಿ ಎದುರಿಸಬೇಕು’ ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.