ADVERTISEMENT

ಬೆಂಗಳೂರು:‘ಐಸಿಯು ಬೆಡ್‌’ ಹೆಸರಿನಲ್ಲಿ ಹಣ ಪಡೆದು ವಂಚನೆ, ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 12:01 IST
Last Updated 29 ಏಪ್ರಿಲ್ 2021, 12:01 IST
   

ಬೆಂಗಳೂರು: ಕೊರೊನಾ ಸೋಂಕಿತರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಐಸಿಯು ಬೆಡ್‌ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಮನೀಶ್ ಸರ್ಕಾರ್ ಎಂಬಾತನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

‘ಪಶ್ಚಿಮ ಬಂಗಾಳದ ಮನೀಶ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ. ಮಲ್ಲೇಶ್ವರದಲ್ಲಿ ನೆಲೆಸಿ, ಹೌಸ್ ಕೀಪಿಂಗ್ ಏಜೆನ್ಸಿ ಆರಂಭಿಸಿದ್ದ. ಸ್ಥಳೀಯ ನಿವಾಸಿಯೊಬ್ಬರು ನೀಡಿದ್ದ ವಂಚನೆ ಆರೋಪದ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದ್ದು, ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದರು.

‘ಕೊರೊನಾ ಸೋಂಕಿತರಿಗೆ ಐಸಿಯು ಬೆಡ್‌ ಒದಗಿಸಲಾಗುವುದು’ ಎಂಬುದಾಗಿ ಹೇಳಿ ಮೊಬೈಲ್‌ ನಂಬರ್ ಸಹಿತ ಆರೋಪಿ ಸಂದೇಶ ಹರಿಬಿಟ್ಟಿದ್ದ. ಹಲವು ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡಿತ್ತು.’

ADVERTISEMENT

‘ಸಂದೇಶ ನಂಬಿದ್ದ ದೂರುದಾರ, ತಮ್ಮ ತಾಯಿಗೆ ಬೆಡ್‌ ಕೊಡಿಸುವಂತೆ ಕೋರಿ ಆರೋಪಿಯನ್ನು ಸಂಪರ್ಕಿಸಿದ್ದರು. ‘ಬೆಡ್‌ ಕೊಡಿಸಲು ಹಣ ಖರ್ಚಾಗುತ್ತದೆ’ ಎಂದಿದ್ದ ಆರೋಪಿ, ದೂರುದಾರರಿಂದ ಗೂಗಲ್ ಪೇ ಮೂಲಕ ₹ 20,000 ಪಡೆದುಕೊಂಡಿದ್ದ. ಅದಾದ ನಂತರ, ದೂರುದಾರರ ಮೊಬೈಲ್ ನಂಬರ್ ಬ್ಲಾಕ್‌ ಮಾಡಿ ನಾಪತ್ತೆಯಾಗಿದ್ದ’ ಎಂದೂ ಹರೀಶ್ ಪಾಂಡೆ ಹೇಳಿದರು.

‘ದೂರುದಾರರ ತಂದೆ–ತಾಯಿ ಇಬ್ಬರಿಗೂ ಕೊರೊನಾ ಸೋಂಕು ತಗುಲಿತ್ತು. ತಾಯಿ ಆರೋಗ್ಯ ತೀವ್ರ ಹದಗೆಟ್ಟಿತ್ತು. ಅವರಿಗಾಗಿ ಐಸಿಯು ಬೆಡ್‌ ಹುಡುಕುತ್ತಿದ್ದರು. ಆದರೆ, ಏಪ್ರಿಲ್ 24ರಂದು ತಾಯಿ ತೀರಿಕೊಂಡಿದ್ದಾರೆ. ಅದಾದ ಮರುದಿನವೂ ತಂದೆ ಸಹ ಅಸುನೀಗಿದ್ದಾರೆ. ಅವರಿಬ್ಬರ ಅಂತ್ಯಕ್ರಿಯೆ ಮುಗಿಸಿದ ಬಳಿಕವೇ ದೂರುದಾರ ಠಾಣೆಗೆ ಬಂದು ದೂರು ನೀಡಿದ್ದರು’ ಎಂದೂ ಅವರು ವಿವರಿಸಿದರು.
‘ತಮಗಾದ ವಂಚನೆ ಬೇರೆ ಯಾರಿಗೂ ಆಗಬಾರದೆಂದು ದೂರುದಾರರು ಬಯಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆರೋಪಿಯನ್ನು ಬಂಧಿಸಲಾಗಿದೆ. ಇಂಥ ಆರೋಪಿಗಳ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು. ಬೆಡ್‌ ಹಂಚಿಕೆ ಪ್ರಕ್ರಿಯೆ ಸಾಫ್ಟ್‌ವೇರ್‌ ಮೂಲಕ ಆಗುತ್ತಿದ್ದು, ಯಾವುದೇ ಹಣ ನೀಡಬೇಕಿಲ್ಲ. ಶ್ರೀಮಂತರು ಹಾಗೂ ಬಡವರೆಂಬ ತಾರತಮ್ಯವೂ ಇಲ್ಲ’ ಎಂದರು.

‘ಐಸಿಯು ಬೆಡ್‌, ಆಕ್ಸಿಜನ್ ಹಾಗೂ ಇತರೆ ಯಾವುದೇ ರೀತಿಯ ಸೇವೆ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಟ್ಟು ವಂಚಿಸಲು ಯತ್ನಿಸುವರ ಬಗ್ಗೆ ಸಾರ್ವಜನಿಕರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು’ ಎಂದೂ ಹರೀಶ್ ಪಾಂಡೆ ಕೋರಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.