ADVERTISEMENT

‘ಗೊರಕೆ ಸಾಕು ಪೊರಕೆ ಬೇಕು ಅಭಿಯಾನ’ಕ್ಕೆ ಚಾಲನೆ

ಪಾಲಿಕೆ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಮನವರಿಕೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 20:37 IST
Last Updated 6 ಡಿಸೆಂಬರ್ 2020, 20:37 IST
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಮಂಜುನಾಥ ನಗರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು 'ಗೊರಕೆ ಸಾಕು, ಪೊರಕೆ ಬೇಕು' ಅಭಿಯಾನ ನಡೆಸಿದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಮಂಜುನಾಥ ನಗರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು 'ಗೊರಕೆ ಸಾಕು, ಪೊರಕೆ ಬೇಕು' ಅಭಿಯಾನ ನಡೆಸಿದರು.   

ಬೆಂಗಳೂರು: ಪಾಲಿಕೆ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸುವ 'ಗೊರಕೆ ಸಾಕು, ಪೊರಕೆ ಬೇಕು' ಅಭಿಯಾನಕ್ಕೆ ಆಮ್ ಆದ್ಮಿ ಪಕ್ಷವು (ಎಎಪಿ) ಭಾನುವಾರ ಚಾಲನೆ ನೀಡಿತು.

ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಅವರು ಮಂಜುನಾಥ ನಗರದ ನಿವಾಸಿಗಳಿಗೆ ಪಕ್ಷದ ಬಾವುಟ ನೀಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಬೆಂಗಳೂರಿನ ಜನತೆ ಮೂರು ಪಕ್ಷಗಳ ಕೆಟ್ಟ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಇಲ್ಲಿನ ಸರ್ಕಾರಗಳವೈಫಲ್ಯಗಳನ್ನು ಜನರಿಗೆ ತಲುಪಿಸಲು ಪ್ರತಿ ವಾರ ಅಭಿಯಾನ ಮಾಡಲಿದ್ದೇವೆ. ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಹುಮತಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಎಎಪಿ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, ‘ಈ ಅಭಿಯಾನದ ಮೂಲಕ ಮೂರು ಪಕ್ಷಗಳಿಗಿಂತ ಆಮ್ ಆದ್ಮಿ ಪಕ್ಷ ಹೇಗೆ ಭಿನ್ನ ಎಂದು ಮನವರಿಕೆ ಮಾಡಿಕೊಡಲಾಗುವುದು. ಸಮೀಕ್ಷೆಯೊಂದರ ಪ್ರಕಾರ ಬೆಂಗಳೂರಿನ ಶೇ 70ರಷ್ಟು ಜನ ನಗರದಲ್ಲೂ ದೆಹಲಿ ಮಾದರಿಯ ಆಡಳಿತ ಬೇಕು ಎಂದಿದ್ದಾರೆ. ನಾವು ಅಧಿಕಾರಕ್ಕೆ ಬಂದು, ಜನರ ಈ ನಿರೀಕ್ಷೆ ಉಳಿಸಿಕೊಳ್ಳುತ್ತೇವೆ’ ಎಂದರು.

ಪಕ್ಷದ ಪದಾಧಿಕಾರಿಗಳಾದ ವಿಜಯ್ ಶರ್ಮ, ಶಾಂತಲಾ ದಾಮ್ಲೆ, ಸಂಚಿತ್ ಸಹಾನಿ, ಜಗದೀಶ್, ದರ್ಶನ್ ಜೈನ್, ಗುರುಮೂರ್ತಿ, ಬಾಲಕೃಷ್ಣೇಗೌಡ, ಲಕ್ಷ್ಮೀಕಾಂತ್ ರಾವ್, ಫಣಿರಾಜ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.