ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಎಲ್ಲಾ ವಾರ್ಡ್ಗಳಲ್ಲೂ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದರು.
‘ಬಿಬಿಎಂಪಿ ಚುನಾವಣೆ ಯಾವ ಕ್ಷಣದಲ್ಲಾದರೂ ಘೋಷಣೆಯಾಗಬಹುದು. ಆದ್ದರಿಂದ ಎಎಪಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ಪ್ರಚಾರ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ’ಮುಖ್ಯಮಂತ್ರಿ‘ ಚಂದ್ರು, ಕೆ.ಮಥಾಯಿ, ಮೋಹನ ದಾಸರಿ, ಲಕ್ಷ್ಮಿಕಾಂತ್ ರಾವ್ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎಎಪಿ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಬಿಬಿಎಂಪಿ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ್ ರಾವ್ ಮಾತನಾಡಿ, ‘ಜನರು ಪಾವತಿಸುವ ತೆರಿಗೆ ಸಾರ್ವಜನಿಕರ ಅಭಿವೃದ್ಧಿಗೆ ಬಳಸಬೇಕೇ ಹೊರತು ರಾಜಕಾರಣಿಗಳ ಏಳ್ಗೆಗೆ ಅಲ್ಲ. ಎಎಪಿ ಅಧಿಕಾರಕ್ಕೆ ಬಂದರೆ ಬೆಂಗಳೂರಿನಲ್ಲಿ ಸುಸಜ್ಜಿತ ಶಾಲೆ, ಆಸ್ಪತ್ರೆ ಉತ್ತಮ ರಸ್ತೆ, ನೀರಿನ ವ್ಯವಸ್ಥೆ ಕಲ್ಪಿಸಿ ಜನಪರ ಪ್ರಾಮಾಣಿಕ ಆಡಳಿತ ನೀಡುತ್ತೇವೆ’ ಎಂದು ಭರವಸೆ ನೀಡಿದರು.
’ಮುಖ್ಯಮಂತ್ರಿ‘ ಚಂದ್ರು, ಕೆ.ಮಥಾಯಿ, ಮೋಹನ ದಾಸರಿ, ಲಕ್ಷ್ಮಿಕಾಂತ ರಾವ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.