ಬೆಂಗಳೂರು: ಮೈಸೂರಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ಸ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಸಿಪೆಟ್) ನಿವೃತ್ತ ಉದ್ಯೋಗಿ ಎಚ್.ಎನ್. ಅರವಿಂದ್ ಮತ್ತು ಬಿಂದು ಅರವಿಂದ್ ದಂಪತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಗೈರಾಗಿದ್ದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಸಿಪೆಟ್ನಲ್ಲಿ ₹1.25 ಕೋಟಿ ಅವ್ಯವಹಾರ ನಡೆಸಿದ ಆರೋಪ ದಂಪತಿ ಮೇಲಿದೆ. ಈ ಸಂಬಂಧ ಸಿಬಿಐ 2009ರಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಿತ್ತು. ಬಳಿಕ ಜಾರಿ ನಿರ್ದೇಶನಾಲಯವೂ ಪಿಎಂಎಲ್ಎ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿತ್ತು. ಬೆಂಗಳೂರು ನಗರದ ಪಿಎಂಎಲ್ಎ ವಿಶೇಷ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಆರೋಪ ನಿಗದಿಯ ಹಂತದಲ್ಲಿ ಅರವಿಂದ್ ಮತ್ತು ಬಿಂದು ನ್ಯಾಯಾಲಯಕ್ಕೆ ಗೈರಾಗಿದ್ದರು. ಇಬ್ಬರ ವಿರುದ್ಧವೂ ಫೆಬ್ರುವರಿ 8ರಂದು ಜಾಮೀನುರಹಿತ ವಾರೆಂಟ್ ಹೊರಡಿಸಿದ್ದ ನ್ಯಾಯಾಲಯ, ಬಂಧನಕ್ಕೆ ಆದೇಶಿಸಿತ್ತು. ಇಬ್ಬರನ್ನೂ ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.