ಬೆಂಗಳೂರು:ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಹಿರಿಯ ಅಧಿಕಾರಿಯೊಬ್ಬರ ಅಂಗರಕ್ಷಕನಿಗೂ ಕೊರೊನಾ ಇರುವುದು ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ರೇಸ್ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಎಸಿಬಿ ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್ಡೌನ್ ಮಾಡಲಾಗಿದೆ.
ಸೋಂಕಿತ ಅಂಗರಕ್ಷಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸಿಬಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ದರೋಡೆ ಆರೋಪಿಗಳಿಗೂ ಕೊರೊನಾ
ಬೆಂಗಳೂರು: ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದ ಇಬ್ಬರು ಆರೋಪಿಗಳಲ್ಲಿ ಕೊರೊನಾ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.
ದರೋಡೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಇತ್ತೀಚೆಗಷ್ಟೇ ಪೊಲೀಸರು ಬಂಧಿಸಿದ್ದರು. ಜೂನ್ 23ರಂದು ಅವರಿಬ್ಬರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದರು. ಅವರ ವರದಿ ಶುಕ್ರವಾರ ಬಂದಿದೆ.
ಆರೋಪಿಗಳನ್ನು ಬಂಧಿಸಿದ್ದ ಹಾಗೂ ವಿಚಾರಣೆ ನಡೆಸಿದ್ದ 10 ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.
ಆಂಬುಲೆನ್ಸ್ಗಾಗಿ ಕಾದ ಗೃಹರಕ್ಷಕ
ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹರಕ್ಷಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ಹೋಗಲು ಹಲವು ಇಡೀ ದಿನ ಆಂಬುಲೆನ್ಸ್ಗಾಗಿ ಕಾಯುವಂತಾಯಿತು.
ಪರೀಕ್ಷಾ ವರದಿ ಬಗ್ಗೆ ಗೃಹ ರಕ್ಷಕರಿಗೆ ಮಾಹಿತಿ ನೀಡಿದ್ದ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಆಂಬುಲೆನ್ಸ್ ಕಳುಹಿಸುವುದಾಗಿ ಹೇಳಿದ್ದರು. ಆದರೆ, ಬೆಳಿಗ್ಗೆಯಿಂದ ಸಂಜೆಯವರೆಗೆ ಕಾದರೂ ಆಂಬುಲೆನ್ಸ ಬಂದಿರಲಿಲ್ಲ. ಸಹೋದ್ಯೋಗಿಗಳೇ ಅವರನ್ನು ಬೇರೊಂದು ಆಂಬುಲೆನ್ಸ್ನಲ್ಲಿ ನಿಗದಿತ ಆಸ್ಪತ್ರೆಗೆ ಕಳುಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.