ADVERTISEMENT

ಕಾರು ಡಿಕ್ಕಿ: ಈರುಳ್ಳಿ ವ್ಯಾಪಾರಿ ಸಾವು

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2019, 10:26 IST
Last Updated 30 ಡಿಸೆಂಬರ್ 2019, 10:26 IST

ಬೆಂಗಳೂರು: ವಿಜಯನಗರ ಠಾಣೆ ವ್ಯಾಪ್ತಿಯ ಗೋವಿಂದರಾಜನಗರ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ಈರುಳ್ಳಿ ವ್ಯಾಪಾರಿ ಪಿ.ಎಂ.ಕೃಷ್ಣಪ್ಪ (57) ಎಂಬುವರು ಮೃತಪಟ್ಟಿದ್ದಾರೆ.

‘ಸ್ಥಳೀಯ ನಿವಾಸಿ ಕೃಷ್ಣಪ್ಪ, ಹಲವು ವರ್ಷಗಳಿಂದ ತಳ್ಳುಗಾಡಿಯಲ್ಲಿ ಈರುಳ್ಳಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ’ ಎಂದು ವಿಜಯನಗರ ಸಂಚಾರ ಪೊಲೀಸರು ಹೇಳಿದರು.

‘ತಳ್ಳುಗಾಡಿ ಸಮೇತ ಕೃಷ್ಣಪ್ಪ ರಸ್ತೆಯಲ್ಲಿ ಹೋಗುತ್ತಿದ್ದರು. ಅದೇ ಸಂದರ್ಭದಲ್ಲೇ ತಳ್ಳುಗಾಡಿಗೆ ಡಿಕ್ಕಿ ಹೊಡೆದಿದ್ದ ಕಾರೊಂದು ನಂತರ ಕೃಷ್ಣಪ್ಪ ಅವರಿಗೆ ಗುದ್ದಿತ್ತು. ಗಾಡಿಯಲ್ಲಿದ್ದ ಈರುಳ್ಳಿ ರಸ್ತೆಯಲ್ಲೆಲ್ಲ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದವು’ ಎಂದರು.

ADVERTISEMENT

‘ತೀವ್ರ ಗಾಯಗೊಂಡು ರಸ್ತೆಯಲ್ಲಿ ನರಳುತ್ತ ಬಿದ್ದಿದ್ದ ಕೃಷ್ಣಪ್ಪ ಅವರನ್ನು ಸಮೀಪದ ಕಾಮಧೇನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ. ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.