ಬೆಂಗಳೂರು: ಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕಾರ್ಮಿಕ ವೆಂಕಟರಾಮಪ್ಪ ಎಂಬುವವರು ಮೃತಪಟ್ಟಿದ್ದಾರೆ.
‘ಜಯನಗರದ 2ನೇ ಹಂತದ ನಿವಾಸಿ ವೆಂಕಟರಾಮಪ್ಪ, ಗುರುವಾರ ರಾತ್ರಿ ಮನೆಗೆ ನಡೆದುಕೊಂಡು ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.
‘ಕಾಲೇಜೊಂದರ ಮಿನಿ ಬಸ್, ವೆಂಕಟರಾಮಪ್ಪ ಅವರಿಗೆ ಗುದ್ದಿತ್ತು. ಕೆಳಗೆ ಬಿದ್ದ ಅವರ ಮೇಲೆಯೇ ಬಸ್ಸಿನ ಚಕ್ರ ಹರಿದು ಹೋಗಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.’
‘ಮಿನಿ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ. ಆತನ ವಿರುದ್ಧವೇ ಪ್ರಕರಣ ದಾಖಲಿಸಿಕೊಂಡು, ವಶಕ್ಕೆ ಪಡೆಯಲಾಗಿದೆ’ ಎಂದೂ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.