ಅಪಘಾತ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಹಾಗೂ ಎಲೆಕ್ಟ್ರಿಷಿಯನ್ ಮೃತಪಟ್ಟಿದ್ದಾರೆ.
ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ ಬಿಟಿಎಂ ಎರಡನೇ ಹಂತದ ನಿವಾಸಿ, ಟೆಕಿ ಮನೀಶ್ ಕುಮಾರ್(25) ಮೃತಪಟ್ಟಿದ್ದಾರೆ.
ಬುಧವಾರ ಬೆಳಿಗ್ಗೆ 11.45ಕ್ಕೆ ಮಡಿವಾಳದ 21ನೇ ಮುಖ್ಯರಸ್ತೆ ಕಡೆಯಿಂದ ಸಿಲ್ಕ್ ಬೋರ್ಡ್ ಕಡೆಗೆ ತೆರಳುವಾಗ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ. ಮಡಿವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಪ್ರದೇಶದ ಮನೀಶ್ ಕುಮಾರ್ ಅವರು ಕೆಲವು ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದರು. ಮಹದೇವಪುರದ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಎಲೆಕ್ಟ್ರಿಷಿಯನ್ ಸಾವು:
ಚಿಕ್ಕಜಾಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಅಪಘಾತ ಪ್ರಕರಣದಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಮೃತಪಟ್ಟಿದ್ದಾರೆ.
ಬೆಟ್ಟ ಹಲಸೂರು ನಿವಾಸಿ ಹರೀಶ್(36) ಮೃತ ಸವಾರ. ಅಪಘಾತದಲ್ಲಿ ಇಬ್ಬರು ಸವಾರರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ವಿಮಾನ ನಿಲ್ದಾಣ ಸಮೀಪದ ಟೋಲ್ಗೇಟ್ನಲ್ಲಿ ಕೆಲಸ ಮಾಡುತ್ತಿದ್ದ ಹರೀಶ್, ಬುಧವಾರ ರಾತ್ರಿ 10.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ರಾಜಾನುಕುಂಟೆ ರಸ್ತೆಯ ಎಂವಿಟಿ ಜಂಕ್ಷನ್ ಮಾರ್ಗವಾಗಿ ಬೆಟ್ಟಹಲಸೂರು ಕಡೆ ಹೋಗುತ್ತಿದ್ದರು. ಅದೇ ವೇಳೆ ಎದುರಿಗೆ ಅತಿವೇಗವಾಗಿ ಬಂದ ಕೆಟಿಎಂ ಬೈಕ್, ಹರೀಶ್ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.