ADVERTISEMENT

ಕೆಎಸ್‌ಆರ್‌ಟಿಸಿ ಬಸ್ ಹರಿದು ಸಾವು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2022, 19:08 IST
Last Updated 18 ಏಪ್ರಿಲ್ 2022, 19:08 IST
   

ಬೆಂಗಳೂರು: ಬಳ್ಳಾರಿ ರಸ್ತೆಯ ಅರಮನೆ ಮೈದಾನ ಬಳಿ ಸೋಮವಾರ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರ ಮೈ ಮೇಲೆ ಹರಿದು ಲಕ್ಷ್ಮಿ (50) ಎಂಬುವವರು ಮೃತಪಟ್ಟಿದ್ದಾರೆ.

‘ಚಿಂತಾಮಣಿ ತಾಲ್ಲೂಕಿನ ಮಡಕರಿ ಗ್ರಾಮದ ಲಕ್ಷ್ಮಿ, ಸಹೋದರನ ಜೊತೆ ಬೈಕ್‌ನಲ್ಲಿ ಹೊರಟಿದ್ದರು. ಅದೇ ವೇಳೆ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ’ ಎಂದು ಸದಾಶಿವನಗರ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಚಾಲಕ ಯಮಣ್ಣ ಎಂಬುವವರನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ಆಸ್ಪತ್ರೆಗೆ ಹೊರಟಿದ್ದ ಮಹಿಳೆ: ‘ಆರೋಗ್ಯ ತಪಾಸಣೆ ಮಾಡಿಸಲೆಂದು ಲಕ್ಷ್ಮಿ ಅವರು ಬೆಂಗಳೂರಿಗೆ ಬಂದಿದ್ದರು. ಅರಮನೆ ಮೈದಾನದ ಪ್ರವೇಶ ದ್ವಾರ 7 ಹಾಗೂ 8ರ ನಡುವಿನ ಮುಖ್ಯರಸ್ತೆಯಲ್ಲಿ ಸಹೋದರ ಜತೆ ಬೈಕ್‌ನಲ್ಲಿ ಹೊರಟಿದ್ದರು. ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್, ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಲಕ್ಷ್ಮಿ ರಸ್ತೆಗೆ ಬಿದ್ದಿದ್ದರು. ಅವರ ಮೇಲೆ ಬಸ್ಸಿನ ಚಕ್ರ ಹರಿದಿತ್ತು. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.