ADVERTISEMENT

ಮದ್ಯದ ಅಮಲಿನಲ್ಲಿ ಅಪಘಾತ: ಚಾಲಕನ ಥಳಿಸಿದ ಜನ

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 20:12 IST
Last Updated 20 ಜೂನ್ 2022, 20:12 IST
   

ಬೆಂಗಳೂರು: ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ಟೆಂಪೊ ಟ್ರಾವೆಲರ್ ಚಲಾಯಿಸಿ ಅಪಘಾತ ಉಂಟುಮಾಡಿದ್ದ ಎನ್ನಲಾದ ಚಾಲಕನನ್ನು ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

‘ವಿಜಯನಗರ ಠಾಣೆ ವ್ಯಾಪ್ತಿಯ ಪಟೇಗಾರಪಾಳ್ಯದಲ್ಲಿ ಸೋಮವಾರ ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಅಪಘಾತಕ್ಕೆ ಕಾರಣನಾದ ಟೆಂಪೊ ಟ್ರಾವೆಲರ್ ಚಾಲಕ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಪಾನಮತ್ತನಾಗಿದ್ದ ನಾಗರಾಜ್, ಅತಿ ವೇಗವಾಗಿ ನಿರ್ಲಕ್ಷ್ಯದಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದ. ರಸ್ತೆಯಲ್ಲಿ ಹೊರಟಿದ್ದ ಮೂರು ದ್ವಿಚಕ್ರ ವಾಹನಕ್ಕೆ ಟೆಂಪೊ ಟ್ರಾವೆಲರ್ ಗುದ್ದಿಸಿದ್ದ. ಅಪಘಾತದ ನಂತರವೂ ವಾಹನ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದ.’

ADVERTISEMENT

‘ಟೆಂಪೊ ಟ್ರಾವೆಲರ್ ಬೆನ್ನಟ್ಟಿ ತಡೆದಿದ್ದ ಸಾರ್ವಜನಿಕರು, ಚಾಲಕ ನಾಗರಾಜ್‌ನನ್ನು ಹಿಡಿದು ಥಳಿಸಿದ್ದರು. ನಂತರ, ಪೊಲೀಸರಿಗೆ ಒಪ್ಪಿಸಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ಸವಾರ ಗಾಯ: ‘ಅಪಘಾತದಿಂದಾಗಿ ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಸವಾರ ಮಲ್ಲಿಕಾರ್ಜುನ ಎಂಬುವವರಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ನಾಗರಾಜ್‌ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಮದ್ಯದ ಅಂಶ ಕಂಡುಬಂದಿದೆ’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.