ADVERTISEMENT

ವಿದ್ಯಾರ್ಥಿಗಳಿಗೆ ಪುಸ್ತಕದ ಹೊರೆ ಕಡಿಮೆ ಮಾಡಲು ಯತ್ನ: ಸಚಿವ ಎಸ್. ಮಧು ಬಂಗಾರಪ್ಪ ‌

​ಪ್ರಜಾವಾಣಿ ವಾರ್ತೆ
Published 8 ಜುಲೈ 2023, 23:49 IST
Last Updated 8 ಜುಲೈ 2023, 23:49 IST
ಬಿಟಿಎಂ ವಿಧಾನಸಭಾ ಕ್ಷೇತ್ರದ 22 ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಚಿವರಾದ ಎಸ್. ಮಧು ಬಂಗಾರಪ್ಪ, ರಾಮಲಿಂಗಾ ರೆಡ್ಡಿ ಉಚಿತ ನೋಟ್ ಬುಕ್, ಸ್ಕೂಲ್ ಬ್ಯಾಗ್ ಮತ್ತು ಸ್ವೆಟರ್‌ ವಿತರಿಸಿದರು.
ಬಿಟಿಎಂ ವಿಧಾನಸಭಾ ಕ್ಷೇತ್ರದ 22 ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಚಿವರಾದ ಎಸ್. ಮಧು ಬಂಗಾರಪ್ಪ, ರಾಮಲಿಂಗಾ ರೆಡ್ಡಿ ಉಚಿತ ನೋಟ್ ಬುಕ್, ಸ್ಕೂಲ್ ಬ್ಯಾಗ್ ಮತ್ತು ಸ್ವೆಟರ್‌ ವಿತರಿಸಿದರು.   

ಬೆಂಗಳೂರು: ‘ವಿದ್ಯಾರ್ಥಿಗಳಿಗೆ ಪುಸ್ತಕದ ಹೊರೆಯನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುವುದು. ಅದಕ್ಕಾಗಿ ರಾಜ್ಯ ಶಿಕ್ಷಣ ನೀತಿ ರೂಪಿಸಲು ನಿರ್ಧರಿಸಿದ್ದು, ಶೀಘ್ರದಲ್ಲಿ ತಜ್ಞರ ಸಮಿತಿ ರಚಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ  ಎಸ್. ಮಧು ಬಂಗಾರಪ್ಪ ‌ತಿಳಿಸಿದರು.

ನಗರದ ಆಡುಗೋಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಶನಿವಾರ ನಡೆದ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22 ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್, ಸ್ಕೂಲ್ ಬ್ಯಾಗ್ ಮತ್ತು ಸ್ವೆಟರ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ  ಅಥವಾ ಬಾಳೆ ಹಣ್ಣು, ಚಿಕ್ಕಿ ಮುಂತಾದ ಪೂರಕ ಪೌಷ್ಟಿಕ ಆಹಾರ ನೀಡಲಾಗುವುದು’ ಎಂದು ಹೇಳಿದರು.

ADVERTISEMENT

‘ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಆಡುಗೋಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಮುನಿಚಿನ್ನಪ್ಪ ಶಾಲೆ) ಇತರೆ ಶಾಲೆಗಳಿಗೆ ಮಾದರಿಯಾಗಿದೆ. 2000ನೇ ಇಸವಿಯಲ್ಲಿ ಈ ಶಾಲೆಯಲ್ಲಿ 190 ವಿದ್ಯಾರ್ಥಿಗಳು ದಾಖಲಾಗಿದ್ದರು. ಪ್ರಸ್ತುತ ಸುಮಾರು 426 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘1945ರಲ್ಲಿ ಈ ಸರ್ಕಾರಿ ಶಾಲೆ ಆರಂಭವಾಗಿತ್ತು. ದಾನಿಗಳ ನೆರವಿನಿಂದ ನವೀಕರಿಸಲಾಗಿದೆ. ಇದೇ ರೀತಿ ಹತ್ತಾರು ಶಾಲೆಗಳು ನವೀಕರಣಗೊಂಡಿವೆ’ ಎಂದು ತಿಳಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜನಪ್ಪ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.