ಸಾಲುಗಟ್ಟಿ ನಿಂತಿರುವ ವಾಹನಗಳು
ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ‘ಏರೊ ಇಂಡಿಯಾ 2025’ ವೈಮಾನಿಕ ಪ್ರದರ್ಶನ ನಡೆಯುತ್ತಿರುವುದರಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ವಿಪರೀತ ಸಂಚಾರ ದಟ್ಟಣೆ ಉಂಟಾಗಿ, ಸವಾರರು ಪರದಾಡಿದರು.
ಏರೊ ಇಂಡಿಯಾ ವೈಮಾನಿಕ ಪ್ರದರ್ಶನ ವೀಕ್ಷಿಸಲು ಗುರುವಾರದಿಂದ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿರುವುದರಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ವೈಮಾನಿಕ ಪ್ರದರ್ಶನದ ಸುತ್ತಮುತ್ತಲ ಪ್ರದೇಶಗಳಲ್ಲಿ ಶಾಲಾ ವಾಹನಗಳು, ಕಾರುಗಳು, ದ್ವಿಚಕ್ರ ವಾಹನಗಳು, ಬಸ್ಗಳ ಸಂಖ್ಯೆ ಹೆಚ್ಚಾಗಿತ್ತು. ಬೆಳಿಗ್ಗೆಯಿಂದಲೇ ಹೆಬ್ಬಾಳ, ಬಳ್ಳಾರಿ ರಸ್ತೆ, ಕೊಡಿಗೆಹಳ್ಳಿ, ಜಕ್ಕೂರು ಸೇರಿ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿತ್ತು.
ಕಿಲೋ ಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹಾಗಾಗಿ ವಾಹನ ಸವಾರರು ನಿಗದಿತ ಸಮಯಕ್ಕೆ ಸ್ಥಳ ತಲುಪಲು ಆಗಲಿಲ್ಲ. ಕೆಲಸಕ್ಕೆ ಹೋಗುವವರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಪರದಾಡಿದರು. ವಿಮಾನ ನಿಲ್ದಾಣ ಕಡೆಗೆ ಸಾಗುವ ವಾಹನಗಳೂ ದಟ್ಟಣೆಯಲ್ಲಿ ಸಿಲುಕಿ ಪರದಾಡಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.