ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ‘ಏರ್ ಇಂಡಿಯಾ–2019’ ವೈಮಾನಿಕ ಪ್ರದರ್ಶನ ವೇಳೆಯ ಅಗ್ನಿ ಅವಘಡಕ್ಕೆ ಸಂಬಂಧಿಸಿದ ತನಿಖೆಯ ಪ್ರಗತಿ ವರದಿಯನ್ನು ಒಂದು ತಿಂಗಳಲ್ಲಿ ಸಲ್ಲಿಸಿ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
‘ಅಗ್ನಿ ಅನಾಹುತ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು’ ಎಂದು ಕೋರಿ ನಿವೃತ್ತ ವಿಂಗ್ ಕಮಾಂ
ಡರ್ ಜಿ.ವಿ ಅತ್ರಿ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಎಎಲ್ ತನ್ನ ಆಕ್ಷೇಪಣೆ ಸಲ್ಲಿಸಲು ನ್ಯಾಯಪೀಠ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
ವಾಯುನೆಲೆಯಲ್ಲಿ 2019ರ ಫೆಬ್ರುವರಿ 20ರಿಂದ ನಾಲ್ಕು ದಿನಗಳ ಕಾಲ ‘ಏರ್ ಇಂಡಿಯಾ–2019’ ವೈಮಾನಿಕ ಪ್ರದರ್ಶನ ನಡೆದಿತ್ತು. ಫೆ.23 ರಂದು ಪಾರ್ಕಿಂಗ್ ಸ್ಥಳದಲ್ಲಿ ಅಗ್ನಿ ಅನಾಹುತ ಸಂಭವಿಸಿ 300ಕ್ಕೂ ಹೆಚ್ಚು ಕಾರುಗಳು ಸುಟ್ಟು ಹೋಗಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.