ಬಂಧನ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ತಂಗಿ ಎಂದು ನಂಬಿಸಿ ಚಿನ್ನ ಪಡೆದು ವಂಚಿಸಿದ ಪ್ರಕರಣದ ಆರೋಪಿಗಳಾದ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಕೆ.ಎನ್. ಹರೀಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ವಿಚಾರಣೆಗೆ ಹಾಜರಾಗಿದ್ದ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದ ಚಂದ್ರಾ ಲೇಔಟ್ ಠಾಣೆ ಪೊಲೀಸರು ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ತೆರಳಿ ಹಾಜರುಪಡಿಸಿದ್ದರು. ಇಬ್ಬರೂ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ವನಿತಾ ಎಸ್. ಐತಾಳ್ ಅವರಿಗೆ ಕರೆ ಮಾಡಿ ಡಿ.ಕೆ.ಸುರೇಶ್ ಅವರ ಧ್ವನಿಯಲ್ಲಿ ಮಾತನಾಡಿದ ಆರೋಪ ಎದುರಿಸುತ್ತಿರುವ ಕನ್ನಡ ನಟ ಧರ್ಮೇಂದ್ರ, ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.
ದೂರುದಾರರಾದ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲಕಿ ವನಿತಾ ಎಸ್. ಐತಾಳ್ ಅವರು ಸಹ ವಿಚಾರಣೆಗೆ ಹಾಜರಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಚಿನ್ನ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳು ಹಾಗೂ ಆಡಿಯೊ ಕ್ಲಿಪಿಂಗ್ಗಳನ್ನು ಪೊಲೀಸರಿಗೆ ನೀಡಿರುವುದಾಗಿ ತಿಳಿಸಿದರು.
ಡಿ.ಕೆ.ಸುರೇಶ್ ಅವರ ಸಹೋದರಿಯೆಂದು ನಂಬಿಸಿ ಖರೀದಿ ನೆಪದಲ್ಲಿ ₹9.82 ಕೋಟಿ ಮೌಲ್ಯದ 14 ಕೆ.ಜಿ. 660 ಗ್ರಾಂ ಚಿನ್ನ ವಂಚಿಸಿದ್ದಾರೆ ಎಂದು ವನಿತಾ ಎಸ್. ಐತಾಳ್ ಅವರು ನೀಡಿದ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ. ಎನ್ ಹಾಗೂ ಧರ್ಮೇಂದ್ರ ಬಿ. ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.