ADVERTISEMENT

ಕಾರ್ಮಿಕ ವಿರೋಧಿ ಆಡಳಿತ ವಿರೋಧಿ ಮುಷ್ಕರಕ್ಕೆ ಎಐಟಿಯುಸಿ ಬೆಂಬಲ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 16:09 IST
Last Updated 7 ಫೆಬ್ರುವರಿ 2026, 16:09 IST
ಅಸಂಘಟಿತ ವಲಯದ ಕಾರ್ಮಿಕರು ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು  –ಪ್ರಜಾವಾಣಿ ಚಿತ್ರ
ಅಸಂಘಟಿತ ವಲಯದ ಕಾರ್ಮಿಕರು ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು  –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕಾರ್ಮಿಕ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ವಿರೋಧಿಸಿ ಫೆಬ್ರುವರಿ 12ರಂದು ದೇಶ ವ್ಯಾಪಿ ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಭಾಗವಹಿಸಲು ಎಐಟಿಯುಸಿ ಸಂಯೋಜಿತ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ನಿರ್ಧರಿಸಿದೆ.

‘ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಜಾರಿಯಲ್ಲಿದ್ದ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ, ದುಡಿಯುವ ಸಮೂಹಕ್ಕೆ ಮಾರಕವಾಗಿರುವ ಹಾಗೂ ಶ್ರೀಮಂತ, ಕಾರ್ಪೊರೇಟ್ ಶಕ್ತಿಗಳ ಹಿತಕಾಯಲೆಂದೇ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಮಿಕ ವರ್ಗಕ್ಕೆ ದ್ರೋಹ ಬಗೆಯುತ್ತಿದೆ’ ಎಂದು ಎಐಟಿಯುಸಿ ಅಧ್ಯಕ್ಷ ಬಿ. ಅಮ್ಜದ್ ತಿಳಿಸಿದ್ದಾರೆ.

‘ಅಂಗನವಾಡಿ ಉದ್ಯೋಗಿಗಳ ಗೌರವಧನ ಹೆಚ್ಚಿಸುವ ಕುರಿತು ಬಜೆಟ್‌ನಲ್ಲಿ ನಿರ್ಲಕ್ಷಿಸಿದೆ. ಕೇಂದ್ರದ ಪೋಷಣ್ ಅಭಿಯಾನದ ಅನುಷ್ಠಾನಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರನ್ನು ಸಮಯದ ಪರಿಮಿತಿ ಇಲ್ಲದೆ ದುಡಿಸಿಕೊಳ್ಳುತ್ತಿದೆ. ಆದ್ದರಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ₹26 ಸಾವಿರ ಕನಿಷ್ಠ ವೇತನ ಜಾರಿಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಕ್ರಮವಾಗಿ 'ಸಿ' ಮತ್ತು 'ಡಿ' ದರ್ಜೆ ನೌಕರರನ್ನಾಗಿ ಮಾನ್ಯತೆ ನೀಡಿ ಕಾಯಂಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.