ಕೆ.ಆರ್.ಪುರ: ‘ಶೋಷಿತರ ಬಾಳಿನ ಬೆಳಕಗಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ನಿಕೃಷ್ಟವಾಗಿ ನಡೆಸಿಕೊಂಡಿತು‘ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ವೈಟ್ಫೀಲ್ಡ್ ಸಮೀಪದ ಅಂಬೇಡ್ಕರ್ ನಗರದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ಹಾಗೂ ಅಂಬೇಡ್ಕರ್ ಭವನವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.
ವಿಶ್ವದಲ್ಲೇ ದೇಶಕ್ಕೆ ಅತ್ಯುನ್ನತ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ಹೀನಾಯ ನಡೆಸಿಕೊಂಡಿತ್ತು. ಅವರು ರಾಜಕೀಯ ಬೆಳವಣಿಗೆ ಹೊಂದಿದ್ದರೆ ಮುಂದೊಂದು ದಿನ ದೇಶದ ಪ್ರಧಾನಿ ಅಥವಾ ರಾಷ್ಟ್ರಪತಿಯಾಗುತ್ತಿದ್ದರು. ಆ ಉದ್ದೇಶದಿಂದ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು’ ಎಂದರು.
‘ಅಂಬೇಡ್ಕರ್ ಅವರು ಸಂವಿಧಾನ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ. ನಮ್ಮ ರಕ್ಷಣೆಗೆ ಕಾನೂನುಗಳನ್ನು ನೀಡಿದ್ದಾರೆ. ಇವೆಲ್ಲವನ್ನು ನಾವು ಅರಿತುಕೊಳ್ಳಬೇಕಿದೆ. ಸಂವಿಧಾನ ಆಶಯಗಳು ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು' ಎಂದರು.
ಈ ಸಂಧರ್ಭದಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ, ಕ್ಷೇತ್ರದ ಗ್ರಾಮಾಂತರ ಮಂಡಲ ಅಧ್ಯಕ್ಷ ಹೆಚ್.ಎಸ್ ಪಿಳ್ಳಪ್ಪ, ನಗರ ಮಂಡಲ ಅಧ್ಯಕ್ಷ ಶ್ರೀಧರ್ ರೆಡ್ಡಿ,
ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಟಾಸ್ಕ್ ಫೋರ್ಸ್ ಅಧ್ಯಕ್ಷ ಮಾರಪ್ಪ ಮುಖಂಡರಾದ ಮನೋಹರ ರೆಡ್ಡಿ, ಮಹೇಂದ್ರ ಮೋದಿ, ಕೈಕೊಂಡ್ರಹಳ್ಳಿ ಪ್ರದೀಪ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.