ಬೆಂಗಳೂರು: ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ತಮಿಳುನಾಡಿನಿಂದ ತಂದು ನಗರದಲ್ಲಿ ಮಾರಾಟ ಮಾಡಲು ಮುಂದಾಗಿದ್ದ ಮೂವರು ಆರೋಪಿಗಳನ್ನು ಮೈಕೋ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ತಮಿಳುನಾಡಿನ ಪನ್ನೀರ್ ಸೆಲ್ವಂ (30), ಆನಂದಶೇಖರ್ (45) ಹಾಗೂ ಕೆ.ಮಂಜು (40) ಬಂಧಿತರು.ಇವರಿಂದ 4 ಕೆ.ಜಿ. 100 ಗ್ರಾಂ ಅಂಬರ್ ಗ್ರೀಸ್ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ಒಟ್ಟು ₹4 ಕೋಟಿ ಎಂದು ಅಂದಾಜಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಇದೇ 22ರಂದು ಠಾಣೆ ವ್ಯಾಪ್ತಿಯ ಸೋಮೇಶ್ವರ ಕಾಲೋನಿಯ ಲೇಕ್ ರಸ್ತೆ ಬಳಿ ಅಪರಿಚಿತ ವ್ಯಕ್ತಿಗಳು ಅಂಬರ್ ಗ್ರೀಸ್ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಇದರ ಆಧಾರದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿತ್ತು. ನಗರದಲ್ಲಿ ಸುಗಂಧ ದ್ರವ್ಯ ತಯಾರಿಸುವವರಿಗೆ ಅದನ್ನು ಅತಿ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ವಿಚಾರಣೆ ಮುಂದುವರಿಸಿದ್ದೇವೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.