ಬೆಂಗಳೂರು: ‘ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯ ಲಿಯೋನ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸುವಂತಹ ವಿಶೇಷ ಏನಿದೆ’ ಎಂದು ಹೈಕೋರ್ಟ್, ಅರ್ಜಿದಾರರನ್ನು ಪ್ರಶ್ನಿಸಿದೆ.
‘ಪ್ರಕರಣದ ತನಿಖೆಯನ್ನು ಎನ್ಐಗೆ ವಹಿಸಬೇಕು’ ಎಂದು ಕೋರಿ ರಾಜ್ಯ ವಕೀಲರ ಪರಿಷತ್ ಸದಸ್ಯ ವಿಶಾಲ ರಘು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಚ್. ಪವನ್ ಚಂದ್ರ ಶೆಟ್ಟಿ, ‘ದೇಶದ ವಿರುದ್ಧ ಘೋಷಣೆ ಕೂಗಿದ ಪ್ರಕರಣವಾಗಿದ್ದು ಅತ್ಯಂತ ಗಂಭೀರ ಸ್ವರೂಪದ್ದಾಗಿದೆ. ಪ್ರಕರಣದ ತನಿಖೆಯನ್ನು ಉಪ್ಪಾರಪೇಟೆ ಠಾಣೆ ತನಿಖಾಧಿಕಾರಿ ಸೂಕ್ತವಾಗಿ ನಡೆಸಿಲ್ಲ. ನಿಗದಿತ 90 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಇದರಿಂದ ಆರೋಪಿಗೆ ಜಾಮೀನು ಸಿಕ್ಕಿದೆ’ ಎಂದು ಆಕ್ಷೇಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇದೊಂದೇ ಕಾರಣಕ್ಕೆ ಆರೋಪಿಗೆ ದೊರೆತಿರುವ ಜಾಮೀನು ರದ್ದು ಪಡಿಸಬಹುದೇ’ ಎಂದು ಪ್ರಶ್ನಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.