ಬೆಂಗಳೂರು: ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯಲ್ಲಿ ಅಂಗನವಾಡಿ ಶಿಕ್ಷಕಿ ಪವಿತ್ರಾ (27) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಅವರ ಗೆಳೆಯ ನಾಗೇಶ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
‘ಎ.ದಾಸರಹಳ್ಳಿ ಬಳಿಯ ಮನೆಯೊಂದರಲ್ಲಿ ವಾಸವಿದ್ದ ಪವಿತ್ರಾ, ಮಂಜುನಾಥ್ ನಗರದ ಅಂಗನವಾಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಮನೆಯಲ್ಲೇ ಶನಿವಾರ ಮಧ್ಯಾಹ್ನ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ಪವಿತ್ರಾ ಬರೆದಿದ್ದಾರೆ ಎನ್ನಲಾದ ಮರಣ ಪತ್ರ ಮನೆಯಲ್ಲಿ ಸಿಕ್ಕಿದೆ. ‘ನನ್ನನ್ನು ಪ್ರೀತಿಸುತ್ತಿದ್ದ ನಾಗೇಶ್, ಮದುವೆಯಾಗುವುದಾಗಿ ಹೇಳಿ ನಂಬಿಸಿದ್ದ. ಈಗ ಬೇರೆ ಮದುವೆಯಾಗಿ ವಂಚಿಸಿದ್ದಾನೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಅದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.
‘ಖಾಸಗಿ ಕಂಪನಿ ಉದ್ಯೋಗಿ ನಾಗೇಶ್ ಹಾಗೂ ಪವಿತ್ರಾ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯಾಗಲೂ ಮುಂದಾಗಿದ್ದರು ಎಂದು ಗೊತ್ತಾಗಿದೆ. ಮದುವೆಗೆ ನಾಗೇಶ್ ಮನೆಯವರು ಒಪ್ಪಿರಲಿಲ್ಲ. ಅದರಿಂದ ಯುವತಿ ಮತ್ತಷ್ಟು ನೊಂದಿದ್ದರು. ಇತ್ತೀಚೆಗಷ್ಟೇ ಮದುವೆಯಾಗಿದ್ದ ನಾಗೇಶ್, ಅದರ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಅದನ್ನು ನೋಡಿ ನೊಂದ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ’ ಎಂದೂ ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.