ಬೆಂಗಳೂರು: ‘ಸರ್ಕಾರಿ ಶಿಕ್ಷಕರ ಸ್ಥಾನಮಾನ ನೀಡಿ, ಸೇವಾ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಶನಿವಾರ ಅಂತ್ಯಗೊಳಿಸಿದ್ದಾರೆ.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಜ. 18ರಿಂದ ಪ್ರತಿಭಟನೆ ಆರಂಭವಾಗಿತ್ತು. ಶುಕ್ರವಾರ ಪ್ರತಿಭಟನಕಾರರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ರಾತ್ರಿ ಬಿಡುಗಡೆ ಮಾಡಿದ್ದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪುನಃ ಸೇರಿದ್ದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಪ್ರತಿಭಟನೆ ಮುಂದುವರಿಸಿದ್ದರು.
ಮುಖಂಡರ ನಿಯೋಗದ ಜೊತೆ ಮಾತುಕತೆ ನಡೆಸಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ‘ರಾಜ್ಯದ ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲು ಹಾಗೂ ಕಾರ್ಯಕರ್ತೆಯರಿಗೆ ನೀಡುವ ವಿವಿಧ ಭತ್ಯೆಗಳನ್ನು ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು. ಉಳಿದಂತೆ, ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಸದ್ಯ ಪ್ರತಿಭಟನೆ ಕೈಬಿಡಿ’ ಎಂದರು.
ಅದಕ್ಕೆ ಒಪ್ಪಿದ ಮುಖಂಡರು, ಪ್ರತಿಭಟನೆ ಅಂತ್ಯಗೊಳಿಸುವುದಾಗಿ ಘೋಷಿಸಿದರು. ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ಸಂಜೆ ಯೇ ತಮ್ಮೂರಿನತ್ತ ಹೊರಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.