ADVERTISEMENT

ಬೆಂಗಳೂರು: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2025, 19:42 IST
Last Updated 19 ಮಾರ್ಚ್ 2025, 19:42 IST
<div class="paragraphs"><p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ&nbsp;ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ಸದಸ್ಯರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಕೊಡೆಗಳ ಮೊರೆ ಹೋಗಿದ್ದರು. </p></div>

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ಸದಸ್ಯರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಕೊಡೆಗಳ ಮೊರೆ ಹೋಗಿದ್ದರು.

   

–ಪ್ರಜಾವಾಣಿ ಚಿತ್ರ

ಬೆಂಗಳೂರು: ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇವಲ ₹ 1 ಸಾವಿರ ಹಾಗೂ ಸಹಾಯಕಿಯರಿಗೆ ₹750 ಗೌರವಧನ ಹೆಚ್ಚಳ ಮಾಡಿರುವ ಸರ್ಕಾರದ ತೀರ್ಮಾನಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ADVERTISEMENT

ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಅಂಗನವಾಡಿ ಕಾರ್ಯಕರ್ತೆಯರು ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

‘ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನವನ್ನು ಒಂದು ತಿಂಗಳಿಗೆ ₹ 15 ಸಾವಿರ, ಸಹಾಯಕಿಯರಿಗೆ ₹ 10 ಸಾವಿರ ಹೆಚ್ಚಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಈಡೇರಿಸಿಲ್ಲ’ ಎಂದು ‍‍ಪ‍್ರತಿಭಟನಕಾರರು ಆರೋಪಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಆದರೆ, ಸರ್ಕಾರ ನಮಗೆ ಕನಿಷ್ಠ ವೇತನದ ವ್ಯಾಪ್ತಿಗೆ ಒಳಪಡಿಸಿ ಸಂಭಾವನೆ ನೀಡದೆ ಅನ್ಯಾಯ ಮಾಡುತ್ತಿದೆ. 2011–12ನೇ ಸಾಲಿನಿಂದ ನಿವೃತ್ತರಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಯಿಟಿ ಸೌಲಭ್ಯ ನೀಡಬೇಕು’ ಎಂದು ಆಗ್ರಹಿಸಿದರು.

‘ಎಲ್ಲ ಅಂಗನವಾಡಿ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಇತ್ತೀಚೆಗೆ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಮಗೆ ಬೇಕಾದ ಸಂಘಟನೆಗಳೊಂದಿಗೆ ಚರ್ಚಿಸುತ್ತಿರುವುದು ಖಂಡನೀಯ’ ಎಂದು ಹೇಳಿದರು.

ಸಮಿತಿಯ ಸದಸ್ಯರಾದ ಜಿ.ಆರ್. ಶಿವಶಂಕರ್, ಬಿ. ನಾಗರತ್ನಮ್ಮ, ಬಿ. ಅಮ್ಜದ್, ಎಂ. ಜಯಮ್ಮ, ಕೆ. ಸೋಮಶೇಖರ್ ಯಾದಗಿರಿ, ಎಂ. ಉಮಾದೇವಿ ಉಪಸ್ಥಿತರಿದ್ದರು.

‘ಬೇಡಿಕೆಗಳನ್ನು ಈಡೇರಿಸುವ ಭರವಸೆ’

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಮಸ್ಯೆಗಳನ್ನು ಪರಿಹರಿಸಿ ಅವರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ ನೀಡಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು ‘2011ರಿಂದ ನಿವೃತ್ತರಾದ ಎಲ್ಲರಿಗೂ ಗ್ರಾಚ್ಯುಯಿಟಿ ಸೌಲಭ್ಯ ನೀಡುವ ಕುರಿತು ಮಾರ್ಚ್‌ 20ರಂದು (ಗುರುವಾರ) ಅಂಗನವಾಡಿ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.