
ಬೆಂಗಳೂರು: ‘ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಸೇರಲಿದೆ. ಐದು ನಗರ ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ ಸುಮಾರು 25 ಲಕ್ಷ ಜನಸಂಖ್ಯೆ ಇದ್ದು, ಆ ಪ್ರದೇಶಗಳನ್ನು ಸೇರಿಸಿಕೊಳ್ಳುವ ಮುನ್ನ ಚರ್ಚೆ ನಡೆಯಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು ದಕ್ಷಿಣ ನಗರ ಪಾಲಿಕೆ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದ ಅವರು, ಆನೇಕಲ್ನ ಮುತ್ತನಲ್ಲೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದರು. ಆನೇಕಲ್ಗೆ ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
‘ಈ ಭಾಗದಲ್ಲಿ ಈಗಿನಿಂದಲೇ ಸಂಚಾರ ದಟ್ಟಣೆ ನಿಯಂತ್ರಣ ಯೋಜನೆ ರೂಪಿಸಬೇಕು. ನಗರ ಬೆಳವಣಿಗೆ ಆದ ನಂತರ ಯೋಜನೆ ರೂಪಿಸಲು ಕಷ್ಟವಾಗಲಿದೆ. ಅದಕ್ಕೆ ಸಭೆ ನಡೆಸಿ ಚರ್ಚಿಸಲಾಗುವುದು’ ಎಂದರು.
‘ಬಯೋಕಾನ್, ಇನ್ಪೋಸಿಸ್ ರಸ್ತೆಯಲ್ಲಿಯೇ ಸಂಚರಿಸಿದ್ದೀರಿ, ಅವರ ಆರೋಪದಂತೆಯೇ ರಸ್ತೆಗುಂಡಿ, ಕಸದ ಸಮಸ್ಯೆ ಕಂಡುಬಂದಿತೇ’ ಎಂದು ಸುದ್ದಿಗಾರರು ಕೇಳಿದಾಗ, ‘ಬಯೋಕಾನ್ ಸಂಸ್ಥೆಯು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದೆ. ಬೆಂಗಳೂರು ನಗರ ವ್ಯಾಪ್ತಿ ಹಾಗೂ ಪಂಚಾಯಿತಿ ವ್ಯಾಪ್ತಿ ಬೇರೆ, ಬೇರೆ. ಈ ಬಗ್ಗೆ ಈಗಾಗಲೇ ಮಾತನಾಡಿದ್ದೇನೆ. ನಾನು ಆ ಪ್ರದೇಶವನ್ನು ನೋಡಿಕೊಂಡು ಬಂದಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.
‘ಜಿಬಿಎ ವ್ಯಾಪ್ತಿಗೆ ಭವಿಷ್ಯದಲ್ಲಿ ಸೇರಲು ಅರ್ಹತೆ ಗಡಿಭಾಗ, ಬೆಂಗಳೂರು ನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದೇನೆ. ಕೆಲವು ನಗರ ಸಭೆಗಳು, ಪಟ್ಟಣ ಪಂಚಾಯಿತಿಗಳು ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಗಡಿಪ್ರದೇಶಗಳು ನನ್ನ ಇಲಾಖೆ ವ್ಯಾಪ್ತಿಗೆ ಸೇರಿವೆ. ಸಂಬಂಧಪಟ್ಟ ಅಧಿಕಾರಿಗಳ ಸಭೆ ಶುಕ್ರವಾರ ನಡೆಯಲಿದೆ’ ಎಂದು ತಿಳಿಸಿದರು.
‘ಈ ವಾರಾಂತ್ಯದಲ್ಲಿ ಐಟಿ-ಬಿಟಿ ಸಂಸ್ಥೆಗಳೊಂದಿಗೆ ಸಭೆ ನಡೆಸುತ್ತೇವೆ. ಅದರಲ್ಲೂ ಮಹದೇವಪುರ ಹಾಗೂ ಕೆ.ಆರ್ ಪುರ ವ್ಯಾಪ್ತಿಯಲ್ಲಿ ಸಭೆ ನಡೆಸಲಾಗುವುದು’ ಎಂದು ತಿಳಿಸಿದರು.
‘ಅಧಿಕಾರಿಗಳು ರಸ್ತೆಗುಂಡಿ ಮುಚ್ಚುತ್ತಿದ್ದಾರೆ. ಅವರಿಗೆ ಜವಾಬ್ದಾರಿ ವಹಿಸಿದ್ದೇವೆ. ಕೆಲವು ಪ್ರದೇಶಗಳಲ್ಲಿ ರಸ್ತೆ ಗುಂಡಿ ಮುಚ್ಚುವ ಬದಲು ಒಂದು ಪದರು ಡಾಂಬರು ಹಾಕುತ್ತಿದ್ದೇವೆ. ಈ ಕಾಮಗಾರಿಗಳು ನಿರಂತರವಾಗಿ ಮುಂದುವರಿಯುತ್ತವೆ. ಪ್ರಮುಖ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸಲಾಗುತ್ತಿದೆ. ಈಗ ಮಳೆ ಕೂಡ ಬರುತ್ತಿದೆ. ಮಳೆ ನಿಲ್ಲಲಿ ಎಂದು ನಾವು ಕಾಯುತ್ತಿದ್ದೇವೆ. ಮಳೆ ನಿಂತ ಬಳಿಕ ನಾವು ಮತ್ತೆ ಈ ಕಾಮಗಾರಿ ಮುಂದುವರಿಸುತ್ತೇವೆ’ ಎಂದು ತಿಳಿಸಿದರು.
‘ಜಿಬಿಎ ಗಡಿಭಾಗದ ಪ್ರದೇಶದ ಕೆಲವು ಭಾಗಗಳನ್ನು ಮುಂದಿನ ದಿನಗಳಲ್ಲಿ ನಗರ ಪಾಲಿಕೆಗಳ ವ್ಯಾಪ್ತಿಗೆ ಸೇರಿಸಬೇಕಾಗುತ್ತದೆ. ಬಿ.ಎಸ್. ಪಾಟೀಲ್ ಅವರ ಸಮಿತಿ ಮೂಲಕ ಜಿಬಿಎ ವ್ಯಾಪ್ತಿಗೆ ಸೇರಿಸಬಹುದಾದ ಪ್ರದೇಶಗಳ ಬಗ್ಗೆ ವರದಿ ತಯಾರಾಗುತ್ತಿದೆ. ಈ ವಿಚಾರವಾಗಿ ಶಾಸಕರು ಸಂಸದರು ಸಾರ್ವಜನಿಕರು ಸಂಘ ಸಂಸ್ಥೆಗಳ ಜೊತೆ ಚರ್ಚಿಸಲು ಸೂಚಿಸಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ‘ಎಲೆಕ್ಟ್ರಾನಿಕ್ ಸಿಟಿ ವೈಟ್ಫೀಲ್ಡ್ ವಿಮಾನ ನಿಲ್ದಾಣ ರಸ್ತೆ ಯಲಹಂಕದ ಕೆಲವು ಪ್ರದೇಶ ಇನ್ನು ಪಂಚಾಯಿತಿಯಾಗಿಯೇ ಉಳಿದುಕೊಂಡಿವೆ. ಎಲ್ಲೆಲ್ಲಿ ನಗರೀಕರಣ ಹೆಚ್ಚಾಗಿದೆ ಆ ಪ್ರದೇಶಗಳಲ್ಲಿ ಅಚ್ಚುಕಟ್ಟಾಗಿ ಯೋಜನೆ ರೂಪಿಸಬೇಕಿದೆ. ಕೆಲವು ಪ್ರದೇಶಗಳಲ್ಲಿ ಕಸ ಎತ್ತುತ್ತಾರೆ ಮತ್ತೆ ಕೆಲವು ಪ್ರದೇಶಗಳಲ್ಲಿ ಕಸ ಎತ್ತದೇ ಅವು ಪಂಚಾಯಿತಿ ವ್ಯಾಪ್ತಿ ಎಂದು ಕಾರಣ ಹೇಳುತ್ತಾರೆ. ಹೀಗಾಗಿ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿಪಡಿಸಬೇಕಾಗಿದೆ. ನಾನು ನಕ್ಷೆಯಲ್ಲಿ ಆ ಪ್ರದೇಶಗಳನ್ನು ನೋಡುವುದಕ್ಕಿಂತ ಅಲ್ಲಿಗೆ ಹೋಗಿ ಕಣ್ಣಾರೆ ನೋಡಬೇಕು ಎಂದು ಈ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ’ ಎಂದರು.
ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಅಕ್ಟೋಬರ್ 30ರಂದು ನಡೆಸಲು ಕೇಂದ್ರ ಇಂಧನ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಒಪ್ಪಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುದಾನಕ್ಕೆ ಒತ್ತಡ ಹಾಕುತ್ತೀರಾ ಎಂದು ಸುದ್ದಿಗಾರರು ಕೇಳಿದಾಗ ‘ಖಂಡಿತವಾಗಿ ಕೇಳುತ್ತೇವೆ. ಕೇಂದ್ರದ ನಗರಾಭಿವೃದ್ಧಿ ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು ನಾವು ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ಈಗಾಗಲೇ ಹಲವು ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಿಯನ್ನು ಭೇಟಿ ಮಾಡಿ ಅನುದಾನ ಕೇಳಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.